ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಆವಾಸ್ ಯೋಜನೆ(ನಗರ) 2.0 ಅಡಿ ನಗರ ಪ್ರದೇಶ ವ್ಯಾಪ್ತಿಯಲ್ಲಿ ಬಡ ಹಾಗೂ ಮಧ್ಯಮ ವರ್ಗದ ವಸತಿ ರಹಿತ (ನಿವೇಶನ/ ಕಚ್ಚಾ ಮನೆ ಹೊಂದಿರುವ) ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರದ https/pmay.urban.gov.in ದಲ್ಲಿ ಅರ್ಜಿ ಆಹ್ವಾನಿಸಿದೆ.
ಜಿಲ್ಲೆಯ ಮಡಿಕೇರಿ ನಗರಸಭೆ, ಕುಶಾಲನಗರ ಮತ್ತು ವಿರಾಜಪೇಟೆ ಪುರಸಭೆ ಹಾಗೂ ಸೋಮವಾರಪೇಟೆ ಮತ್ತು ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾರ್ಡುಗಳಲ್ಲಿ ಇದುವರೆಗೂ ವಸತಿ ಯೋಜನೆಗಳ ಸೌಲಭ್ಯ ಪಡೆಯದ ಎಲ್ಲಾ ವಸತಿ ರಹಿತ ಹಾಗೂ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ (ವಿಶೇಷವಾಗಿ ಸಪಾಯಿ ಕರ್ಮಚಾರಿಗಳು, ಬೀದಿ ಬದಿ ವ್ಯಾಪಾರಿಗಳು, ಪಿ.ಎಂ. ವಿಶ್ವಕರ್ಮ ಯೋಜನೆಯ ಫಲಾನುಭವಿಗಳು, ಕಟ್ಟಡ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಕೊಳಚೆ ಪ್ರದೇಶದ ನಿವಾಸಿಗಳು ಸೇರಿದಂತೆ) ವಸತಿ ಸೌಲಭ್ಯ ಪಡೆಯಲು ಜುಲೈ, 15 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿದಾರರು ನಿಗಧಿತ ನಮೂನೆಯಲ್ಲಿ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ವಸತಿ ಶಾಖೆಗೆ ಪೋಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಓಟರ್ ಐಡಿ, ಬ್ಯಾಂಕ್ ಪಾಸ್ ಪುಸ್ತಕ, ನಿವೇಶನ, ಕಚ್ಚಾ ಮನೆಯ ದಾಖಲೆಗಳ ಪ್ರತಿಗಳನ್ನು ಸಲ್ಲಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ನಗರ ಸ್ಥಳೀಯ ಸಂಸ್ಥೆಗಳ ವಸತಿ ಶಾಖೆಯನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.