ಬೆಂಗಳೂರು: ವಸತಿ ಯೋಜನೆಯಡಿ ಮನೆಗಳ ಹಂಚಿಕೆಗೆ ಹಣ ಪಡೆದು ಕೊಡಲಾಗುತ್ತಿದೆ ಎಂಬ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಆಡಿಯೋ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಸರ್ಕಾರದ ವಿರುದ್ಧ ವಿಪಕ್ಷಗಳು ವಾಗ್ದಾಳಿ ನಡೆಸಿವೆ.
ಬಿ.ಆರ್.ಪಾಟೀಲ್ ಹಾಗೂ ಸಚಿವ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.
ನೈಜ ಹೋರಾಟಗಾರರ ವೇದಿಕೆ ಅಧ್ಯಕ್ಷ ವೆಂಕಟೇಶ್, ಲೋಕಾಯುಕ್ತಕ್ಕೆ ದೂರು ನೀಡಿದ್ದು, ಬಿ.ಆರ್.ಪಾಟೀಲ್ ಆಡಿಯೋ ಸಂಭಾಷಣೆ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಜನರ ತೆರಿಗೆ ಹಣವನ್ನು ಬಳಸಿಕೊಂಡು ವಂಚನೆ ಎಸಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಲೋಕಾಯುಕ್ತ ಸುಮೋಟೋ ಕೆಸ್ ದಾಖಲಿಸಿ ತನಿಖೆ ನಡೆಸಲಿ ಎಂದು ಒತ್ತಾಯಿಸಿದ್ದಾರೆ.