ಬೆಂಗಳೂರು: ಖಾಸಗಿ ವಿಶ್ವವಿದ್ಯಾಲಯಕ್ಕೆ ಕಡಿಮೆ ಬೆಲೆಗೆ ಸರ್ಕಾರಿ ಜಮೀನು ನೀಡಿದ ಆರೋಪದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿಗೆ ವಿಳಂಬ ಹಿನ್ನೆಲೆಯಲ್ಲಿ ರಾಜ್ಯಪಾಲರ ಕಚೇರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಪ್ರಕರಣ ಸಂಬಂಧ ದೂರುದಾರ ಸಾಮಾಜಿಕ ಕಾರ್ಯಕರ್ತ ಟಿ.ನರಸಿಂಹಮೂರ್ತಿ ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಪೀಠ, ರಾಜ್ಯಪಾಲರ ಕಚೇರಿಗೆ ನೋಟಿಸ್ ನೀಡಿದೆ.
ವಿಶೇಷ ನ್ಯಾಯಾಲಯದ ಸೂಚನೆ ಮೇರೆಗೆ ಪೂರ್ವಾನುಮತಿ ಕೋರಿ 2024ರ ಅಕ್ಟೋಬರ್ 18ರಂದು ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಈವರೆಗೆ ವಿಲೇವಾರಿ ಮಾಡಿಲ್ಲ. ಪೂರ್ವಾನುಮತಿ ಕೋರಿದ ಅರ್ಜಿಗಳನ್ನು ಮೂರು ತಿಂಗಳಲ್ಲಿ ಕಡ್ಡಾಯವಾಗಿ ವಿಲೇವಾರಿ ಮಾಡಬೇಕು. ಅದರಂತೆ ತಮ್ಮ ಅರ್ಜಿಯನ್ನು ಇತ್ಯರ್ಥಪಡಿಸಲು ರಾಜ್ಯಪಾಲರ ಕಚೇರಿಗೆ ಸೂಚಿಸಬೇಕು ಎಂದು ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ರಾಜ್ಯಪಾಲರ ಕಚೇರಿಗೆ ನೋಟಿಸ್ ನೀಡಿದೆ.