ಮೈಸೂರು: ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನುಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಸರ್ಕಾರದ ಈ ಕ್ರಮಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ದಸರಾ 100% ಧಾರ್ಮಿಕ ಆಚರಣೆ. ನವರಾತ್ರಿ ಉತ್ಸವ ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿ ದಸರಾಗೆ ಚಾಲನೆ ನೀಡಲಾಗುತ್ತದೆ. ಬಾನು ಮುಷ್ತಾಕ್ ಅವರಿಗೆ ಚಾಮುಂಡಿ ಮೇಲೆ ನಂಬಿಕೆ ಇದೆಯಾ? ಸಾಹಿತಿ ಬಾನು ಮುಷ್ತಾಕ್ ಚಾಮುಂಡಿ ತಾಯಿ ಭಕ್ತೆ ಎಂದು ಹೇಳಿದ್ದಾರಾ? ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ? ಎಂದು ಪ್ರಶ್ನಿಸಿದ್ದಾರೆ.
ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾನ್ನಾಗಿ ಅವರನ್ನು ಘೋಷಿಸಿದರೆ ತಕರಾರಿಲ್ಲ. ಧಾರ್ಮಿಕ ನಂಬಿಕೆ ವಿರೋಧಿಗಳಿಗೆ ಯಾಕೆ ಸಿಎಂ ದಸರಾ ಉದ್ಘಾಟನೆಗೆ ಕರೆಯುತ್ತಿದ್ದಾರೆ? ಮಹಾರಾಜರ ಪರಂಪರೆಯನ್ನು ಸಿಎಂ ಹಾಳು ಮಾಡುತ್ತಿದ್ದಾರೆ. ರಿಷಬ್ ಶೆಟ್ಟಿಗೆ ರಾಷ್ಟ್ರೀಯ ಪ್ರಶಸ್ತಿ ಬಂತು. ಅವರನ್ನು ಕರೆಯುತ್ತೀರಾ? ಪ್ರಶಸ್ತಿ ಬಂದವರನ್ನೆಲ್ಲಾ ದಸರಾ ಉದ್ಘಾಟನೆಗೆ ಕರೆಯಲು ಆಗುತ್ತಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.