BIG NEWS: ಕಾಂಗ್ರೆಸ್ ದೇಶಾದ್ಯಂತ ಇಬ್ಬಾಗವಾಗಲಿದೆ; ಮಾಜಿ ಸಿಎಂ ಬೊಮ್ಮಾಯಿ ಭವಿಷ್ಯ

ಬೆಂಗಳೂರು: ನರೇಂದ್ರ ಮೋದಿಯವರು 3ನೇ ಬಾರಿ ಪ್ರಧಾನಿಯಾದ ಒಂದು ತಿಂಗಳಲ್ಲಿ ಕಾಂಗ್ರೆಸ್ ದೇಶಾದ್ಯಂತ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.

ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಕರ್ನಾಟಕದ ಇತಿಹಾಸದಲ್ಲಿ ಇಷ್ಟು ದೊಡ್ಡ ನಾಟಕ ಮಾಡುವ ಸರ್ಕಾರ ಇನ್ನೊಂದಿಲ್ಲ.‌ ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆದ ಮೇಲೆ ತಮ್ಮ ತತ್ವ ಸಿದ್ದಾಂತ ಗಾಳಿಗೆ ತೂರಿ ತಮ್ಮ ಸ್ಥಾನ ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಆರಂಭವಾಗಿಲ್ಲ. ಬರಗಾಲ ಬಿದ್ದಿದೆ ಬರ ಪರಿಹಾರ ನೀಡಿಲ್ಲ. ಯಾವ ನೈತಿಕತೆ ಇಟ್ಟುಕೊಂಡು ದೆಹಲಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ‌? ಎಂದು ಪ್ರಶ್ನಿಸಿದರು. ಯುಪಿಎ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ಎಷ್ಟು ಅನುದಾನ ಬಂದಿದೆ. ಎನ್ ಡಿಎ ಅವಧಿಯಲ್ಲಿ ಎಷ್ಟು ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಲಿ, ಯುಪಿಎ ಅವಧಿಯಲ್ಲಿ 82 ಸಾವಿರ ಕೋಟಿ ಮಾತ್ರ ಬಂದಿದೆ. ಪ್ರಧಾನಿ ಮೋದಿ ಅವಧಿಯಲ್ಲಿ 2.82 ಲಕ್ಷ ಕೋಟಿ ಬಂದಿದೆ. ಎನ್ ಡಿಎ ಅವಧಿಯಲ್ಲಿ ಎರಡು ಲಕ್ಷ ಕೋಟಿ ರೂ ಹೆಚ್ಚಿಗೆ ಬಂದಿದೆ. ರಾಜ್ಯಕ್ಕೆ ಅನ್ಯಾಯ ಮಾಡಿದವರು ಮನಮೋಹನ್ ಸಿಂಗ್ ಮತ್ತು ಸಿದ್ದರಾಮಯ್ಯ ಎಂದು ವಾಗ್ದಾಳಿ ನಡೆಸಿದರು.

ಮೊದಲು ರಾಜ್ಯಗಳಿಗೆ ಅನುದಾನ ಶೇ 32% ಬರುತ್ತಿತ್ತು. ಮೋದಿಯವರು ಅದನ್ನು ಶೇ 42% ಹೆಚ್ಚಳ ಮಾಡಿದ್ದಾರೆ. ಹಣಕಾಸು ಆಯೋಗ ಕೇಂದ್ರ ಸರ್ಕಾರಕ್ಕೂ ಸಂಬಂಧ ಇಲ್ಲ. ಅದು ಎಲ್ಲ ರಾಜ್ಯಗಳಿಗೂ ಭೇಟಿ ನೀಡಿ, ಬಡತನ, ಜಸಂಖ್ಯೆ ತಲಾ ಆದಾಯ ಎಲ್ಲವನ್ನು ಪರಿಗಣನೆ ಮಾಡುತ್ತದೆ. 15 ನೇ ಹಣಕಾಸು ಆಯೋಗ ರಾಜ್ಯಕ್ಕೆ ಭೇಟಿ ನೀಡಿದಾಗ ಸಿದ್ದರಾಮಯ್ಯ ಅವರ ಸರ್ಕಾರ ಇತ್ತು. ಆಗ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ತಿಳಿಸಲು ವಿಫಲವಾಗಿದೆ. ರಾಜ್ಯದ ಪಾಲು ಶೇ 4.7 % ದಿಂದ ಶೇ 3.6% ಕ್ಕೆ ಕಡಿಮೆಯಾಗಲು ಸಿದ್ದರಾಮಯ್ಯ ಅವರೆ ನೇರ ಕಾರಣ ಎಂದು ವಾಗ್ದಾಳಿ ನಡೆಸಿದರು.

ಮೋದಿಯವರ ಕಾಲದಲ್ಲಿ ಆಯುಷ್ಮಾನ್ ಭಾರತ ಯೋಜನೆ ಅಡಿಯಲ್ಲಿ 60 ಲಕ್ಷ ಜನರಿಗೆ ಆರೋಗ್ಯ ಸೌಲಭ್ಯ ಪಡೆದಿದ್ದಾರೆ. ಮುದ್ರಾ ಯೋಜನೆ ಅಡಿಯಲ್ಲಿ 60 ಲಕ್ಷ ಯುವಕರಿಗೆ ಬ್ಯಾಂಕ್ ಸಾಲ ನೀಡಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆಗಳನ್ನು ಮೊದಿ ಸರ್ಕಾರ ನೀಡಿದೆ. ಕಾಂಗ್ರೆಸ್ ‌ಕಾಲದಲ್ಲಿ 85 ಕಿ. ಮೀ ರೈಲ್ವೆ ವಿದ್ಯುದೀಕರಣ ಆಗಿತ್ತು. ನಮ್ಮ ಅವಧಿಯಲ್ಲಿ 3,500 ಕಿ. ಮೀ ರೈಲ್ವೆ ವಿದ್ಯುದೀಕರಣ ಆಗಿದೆ. ರಾಷ್ಟ್ರೀಯ ಹೆದ್ದಾರಿ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ 65 ವರ್ಷದಲ್ಲಿ 6500 ಕೀ. ಮೀ ಅಭಿವೃದ್ಧಿ ಮಾಡಲಾಗಿತ್ತು. ನಮ್ಮ ಮೊದಿ ಅವರ ಅವಧಿಯಲ್ಲಿ 13,000 ಕಿ.ಮೀ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪಡೆಸಿದ್ದಾರೆ‌. ರಾಜ್ಯಕ್ಕೆ ಅನ್ಯಾಯ ಮಾಡಿದ್ದು ಮನಮೊಹನ್ ಸಿಂಗ್ ಸರ್ಕಾರ.

ಕೊವಿಡ್ ಸಮಯದಲ್ಲಿ ಮೋದಿ ಸರ್ಕಾರದಲ್ಲಿ ರಾಜ್ಯಕ್ಕೆ 10 ಕೋಟಿ ಲಸಿಕೆ ನೀಡಿದ್ದಾರೆ. ಒಂದು ವೇಳೆ ಆ ಸಮಯದಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ರಸ್ತೆಯಲ್ಲಿ ಹೆಣ ಬೀಳುತ್ತಿದ್ದವು ಎಂದು ಹೇಳಿದರು.

ಕೃಷ್ಣಾ3 ನೇ ಹಂತದ ಯೊಜನೆಗೆ ನಾವು ಚಾಲನೆ ಕೊಟ್ಡಿದ್ದೇವೆ. ಅದನ್ನು ಸಿದ್ದರಾಮಯ್ಯ ಮುಂದುವರೆಸಿಲ್ಲ. ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಸ್ಥಗಿತಗೊಳಿಸಿದ್ದಾರೆ‌. ಕೇಂದ್ರ ಸರ್ಕಾರ ಭದ್ರಾ ಯೋಜನೆಗೆ ಬಜೆಟ್ ನಲ್ಲಿ ಮೀಸಲಿಟ್ಟಿರುವ 5,300 ಕೋಟಿ ರೂ. ಹಣವನ್ನು ಪಡೆಯಲು ಸರಿಯಾದ ರೀತಿಯಲ್ಲಿ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿಲ್ಲ. ಕಾವೇರಿ ಕೊಳ್ಳದ ಯೋಜನೆಗಳು ಸ್ಥಗಿತವಾಗಿವೆ. ನಾವು ಪ್ರವಾಹ ಬಂದಾಗ ನೇರವಾಗಿ ರೈತರ ಅಕೌಂಟ್ ಗೆ ಹಣ ವರ್ಗಾವಣೆ ಮಾಡಿದ್ದೇವೆ. ಯಾವ ಸರ್ಕಾರ ರೈತರು, ಮಹಿಳೆಯರು, ಬಡವರ ಕಷ್ಟಕ್ಕೆ ಸ್ಪಂದಿಸುವುದಿಲ್ಲವೋ ಅದು ಇದ್ದೂ ಸತ್ತಂತೆ. ಸಿದ್ದರಾಮಯ್ಯನವರೇ ನಿಮ್ಮ ಸರ್ಕಾರದ ಇತರ ಇಲಾಖೆಗಳಲ್ಲಿ ಏನು ನಡೆಯುತ್ತಿದೆ ಎಂದು ನೋಡಿ, ಕೇವಲ ವರ್ಗಾವಣೆ ದಂಧೆ ಮಾಡಿಕೊಂಡು ಓಡಾಡುತ್ತಿದ್ದೀರಾ ಎಂದು ಆರೋಪಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read