ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ಖಾಕಿ ಬುಲೆಟ್ ಸದ್ದು ಮಾಡಿದೆ. ಕೊಲೆ ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಆರ್.ಆರ್.ನಗರದ ಷಣ್ಮುಗ ದೇವಸ್ಥಾನದ ಬಳಿ ಕೊಲೆ ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ದೀಪು (28) ಹಾಗೂ ಅರುಣ್ (27) ಬಂಧಿತ ಆರೋಪಿಗಳು. ಮಾರಕಾಸ್ತ್ರಗಳಿಂದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದರು.
ಕೊಲೆ ಆರೋಪಿಗಳನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಎ ಎಸ್ ಐ ಕುಮಾರ್, ಕಾನ್ಸ್ ಟೇಬಲ್ ಕರೀಂ ಸಾಬ್ ಮೇಲೆ ಹಲ್ಲೆ ನಡೆಸಿದ್ದರು. ಆತ್ಮರಕ್ಷಣೆಗಾಗಿ ಪಿಐ ಕೆಂಪೇಗೌಡ, ಪಿಎಸ್ ಐ ಪದ್ಮನಾಭ ಇಬ್ಬರು ಕೊಲೆ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಆರೋಪಿಗಳಾದ ಅರುಣ್, ದೀಪು ಕಾಲಿಗೆ ಗುಂಡೆಟು ತಗುಲಿದೆ. ತಕ್ಷಣ ಇಬ್ಬರನ್ನು ಬಂಧಿಸಿದ್ದಾರೆ.
ಗಾಯಾಳು ಪೊಲೀಸ್ ಸಿಬ್ಬಂದಿ ಹಾಗೂ ಆರೋಪಿಗಳಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆಯಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ ವಿಜಯ್ ಎಂಬಾತನನ್ನು ಮಾತುಕತೆಗೆ ಎಂದು ಕರೆದು ಜೆ.ಜೆ ನಗರದ ಕಾಲೋನಿಯಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದರು. ಕೃತ್ಯದ ಬಳಿಕ ಆರ್.ಆರ್. ನಗರದಲ್ಲಿ ಆರೋಪಿಗಳು ತಲೆಮರೆಸಿಕೊಂಡಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಗುಂಡೇಟು ಹೊಡೆದು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.