ಬೆಂಗಳೂರು: ವಿದ್ಯುತ್ ಸಂಪರ್ಕಕ್ಕೆ ಸ್ವಾಧೀನಾನುಭವ ಪತ್ರ(ಓಸಿ) ಕಡ್ಡಾಯದಿಂದಾಗಿ ಸುಮಾರು 2 ಲಕ್ಷ ಮನೆ, ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಸಮಸ್ಯೆಯಾಗಿದೆ. ಹೀಗಾಗಿ ನಿಯಮಗಳಿಗೆ ತಿದ್ದುಪಡಿ ತಂದು ಬಡವರಿಗೆ ವಿದ್ಯುತ್ ಸಂಪರ್ಕ ನೀಡುವ ಕುರಿತು ಚರ್ಚಿಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಓಸಿ ಇಲ್ಲದ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಹಾಗೂ ನೀರು ಸರಬರಾಜು ಮಾಡದಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಅದರಂತೆ ಕೆ.ಇ.ಆರ್.ಸಿ. ಆದೇಶದ ಪ್ರಕಾರವೇ ಎಸ್ಕಾಂ ಗಳು ವಿದ್ಯುತ್ ಸಂಪರ್ಕಕ್ಕೆ ಓಸಿ ಕಡ್ಡಾಯ ಮಾಡಿವೆ ಎಂದು ತಿಳಿಸಿದ್ದಾರೆ.
ಓಸಿ ಕಡ್ಡಾಯದಿಂದಾಗಿ ಬಡವರ ಮನೆ, ಕಟ್ಟಡ ಹಾಗೂ ಕೈಗಾರಿಕೆಗಳಿಗೆ ಓಸಿ ಇಲ್ಲದೆ ವಿದ್ಯುತ್ ಸಂಪರ್ಕ ಸಿಗುತ್ತಿಲ್ಲ ಎಂಬುದು ಗಮನಕ್ಕೆ ಬಂದಿದೆ. ಅಂದಾಜಿನ ಪ್ರಕಾರ ಎರಡು ಲಕ್ಷ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಇಲ್ಲದಂತಾಗಿದೆ. ಈ ಸಮಸ್ಯೆ ಬಗೆಹರಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಅವರು ನಿಯಮ ತಿದ್ದುಪಡಿಗೆ ಪ್ರಸ್ತಾವನೆ ಮಂಡಿಸಿದರೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ಜಾರ್ಜ್ ಹೇಳಿದ್ದಾರೆ.