ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಮತ್ತು ಹೆಚ್.ಡಿ. ಕುಮಾರಸ್ವಾಮಿ ಅವರ ಅವಧಿಯಲ್ಲಿ ನಡೆದಿದ್ದ ಒಟ್ಟು 29 ಪ್ರಕರಣಗಳಲ್ಲಿ ಬಿಡಿಎ ಡಿನೋಟಿಫಿಕೇಶನ್ ಗಳನ್ನು ರದ್ದು ಮಾಡುವ ಬಗ್ಗೆ ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನದ ಬಗ್ಗೆ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾನೂನು ಸಚಿವ ಹೆಚ್.ಕೆ. ಪಾಟೀಲ್, ಈ ಪ್ರಕರಣಗಳಲ್ಲಿ ನಿಯಮಬಾಹಿರವಾಗಿ ಭೂಸ್ವಾಧೀನದಿಂದ ಕೈಬಿಡಲು ಕಾರಣವಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆಯೂ ಸಂಪುಟ ಸಭೆ ನಿರ್ಣಯ ಕೈಗೊಂಡಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ವಶಪಡಿಸಿಕೊಂಡು ಪ್ರಾಥಮಿಕ ಮತ್ತು ಅಂತಿಮ ಅಧಿಸೂಚನೆ ಹೊರಡಿಸಿದ ಜಮೀನುಗಳನ್ನು ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡಲು ಕಾನೂನಿನಲ್ಲಿ ಅವಕಾಶವಿಲ್ಲ. ಆದರೂ ಒಟ್ಟು 29 ಪ್ರಕರಣಗಳಲ್ಲಿ ಭೂಸ್ವಾಧೀನ ಕೈ ಬಿಡಲಾಗಿದೆ. ಈ ಪ್ರಕರಣಗಳಲ್ಲಿ ಎಲ್ಲಾ ಸಂಬಂಧಿಸಿದ ಬಾಧಿತ ವ್ಯಕ್ತಿಗಳಿಗೆ ನೋಟಿಸ್ ನೀಡಿ ವಿವರಣೆ ಪಡೆದುಕೊಂಡು ನಿಯಮಬಾಹಿರವಾಗಿ ಡಿನೋಟಿಫೈ ಮಾಡಿರುವ ಅಧಿಸೂಚನೆಗಳನ್ನು ಹಿಂಪಡೆಯಲು ಸಂಪುಟ ಸಭೆ ನಿರ್ಧರಿಸಿದೆ ಎಂದು ಹೇಳಿದ್ದಾರೆ.
2007 ರಿಂದ 2010ರ ಅವಧಿಯಲ್ಲಿ ನಡೆದ ಈ ಡಿನೋಟಿಫಿಕೇಶನ್ ಪ್ರಕರಣಗಳಲ್ಲಿ ಸುಮಾರು 50 ಎಕರೆಗೂ ಹೆಚ್ಚು ಭೂಮಿಯನ್ನು ಬಿಡಿಎ ಸ್ವಾಧೀನದಿಂದ ಕೈ ಬಿಡಲಾಗಿದೆ. ಈ ಕಾನೂನು ಉಲ್ಲಂಘನೆಗಾಗಿ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧವೂ ಶಿಸ್ತು ಕ್ರಮ ಜರುಗಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.