BIG NEWS : ‘ಸುರಕ್ಷತಾ ಕ್ರಮ’ ಗಳ ಕುರಿತು ರಾಜ್ಯದ ಎಲ್ಲಾ ಶಾಲೆಗಳಿಗೆ ‘ಶಿಕ್ಷಣ ಇಲಾಖೆ’ಯಿಂದ ಮಹತ್ವದ ಸುತ್ತೋಲೆ

ಬೆಂಗಳೂರು : ಸುರಕ್ಷತಾ ಕ್ರಮಗಳ ಕುರಿತು ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದ್ದು, ಅದರಂತೆ ಕ್ರಮ ಕೈಗೊಳ್ಳಲು ಸೂಚಿಸಿದೆ.

ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಚಟುವಟಿಕೆಗಳನ್ನು ಹೊರತುಪಡಿಸಿ ಇನ್ನಿತರೆ ಯಾವುದೇ ಚಟುವಟಿಕೆಗಳಿಗೆ ಬಳಸಿಕೊಳ್ಳುವುದನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಲಾಗಿರುತ್ತದೆ. ಆದಾಗ್ಯೂ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಚಟುವಟಿಕೆಗಳನ್ನು ಹೊರತು ಪಡಿಸಿ, ಇತರ ಚಟುವಟಿಕೆಗಳಿಗೆ ಇಲಾಖೆ ಅನುಮತಿ ಇಲ್ಲದೆ ಬಳಸಿಕೊಳ್ಳುವುದಕ್ಕೆ ಹಾಗೂ ಅನುಮತಿಸುವುದಕ್ಕೆ ಅವಕಾಶ ನೀಡಬಾರದು ಎಂದು ಸೂಚನೆ ನೀಡುತ್ತಾ, ಶಾಲಾ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಚಟುವಟಿಕೆಗಳನ್ನು ಹೊರತುಪಡಿಸಿ ಇತರೆ ಯಾವುದೇ ಚಟುವಟಿಕೆಗಳಿಗೆ ಬಳಸಿಕೊಳ್ಳದಂತೆ ಮತ್ತೊಮ್ಮೆ ಈ ಮೂಲಕ ತಿಳಿಸಲಾಗಿದೆ.

ಉಲ್ಲೇಖ-2ರಲ್ಲಿ ಶಾಲಾ ಆವರಣವು ಶಾಲೆಯಲ್ಲಿ ಮಕ್ಕಳಿಗೆ ದೈನಂದಿನ ಪಾಠ ಪ್ರವಚನಗಳೊಂದಿಗೆ ಪಠೇತರ ಚಟುವಟಿಕೆಗಳು ಮತ್ತು ಆಟೋಟ ಕಾರ್ಯಕ್ರಮಗಳು, ಶಾರೀರಿಕ ಶಿಕ್ಷಣ ಹಾಗೂ ವ್ಯಾಯಾಮ, ಮತ್ತಿತರ ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಸದ್ವಿನಿಯೋಗವಾಗಬೇಕು ಎಂಬ ಉದ್ದೇಶದಿಂದ ಶಾಲಾ ಮೈದಾನ/ಆವರಣವನ್ನು ಶೈಕ್ಷಣಿಕೇತರ ಚಟುವಟಿಕೆಗಳಿಗೆ /ಉದ್ದೇಶಗಳಿಗೆ ಸರ್ಕಾರ /ಇಲಾಖೆ ಅನುಮತಿ ಇಲ್ಲದೆ ಬಳಸಬಾರದು ಹಾಗೂ ಅನುಮತಿ ನೀಡಬಾರದು ಎಂದು ತಿಳಿಸಲಾಗಿದ್ದು, ಅದರಂತೆ ಕ್ರಮವಹಿಸಲು ಮತ್ತೊಮ್ಮೆ ಸೂಚಿಸಲಾಗಿದೆ.

ಮುಂದುವರೆದು ಶಾಲೆಗೆ ಸಂಬಂಧವಿರದ ಯಾವುದೇ ವ್ಯಕ್ತಿಗಳು ಶಾಲೆಯ ಆವರಣದಲ್ಲಿ ಅನಗತ್ಯವಾಗಿ ಸುತ್ತಾಡುತ್ತಿರುವುದು ಕಂಡುಬಂದಲ್ಲಿ ಹಾಗೂ ಯಾವುದೇ ವ್ಯಕ್ತಿಗಳಿಂದ ಶಾಲಾ ಸುರಕ್ಷತೆಗೆ ಭಂಗ ತರುವಂತಹ ಅನಾಮಧೇಯ ದೂರವಾಣಿ ಕರೆಗಳು, ಪತ್ರಗಳು ಬಂದಲ್ಲಿ ಅಥವಾ ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಪಡಿಸಿದಲ್ಲಿ ಸಂಬಂಧಿಸಿದ ಇಲಾಖಾಧಿಕಾರಿಗಳು ಮತ್ತು ಸ್ಥಳೀಯ ಪೋಲೀಸ್ ಅಧಿಕಾರಿಗಳ ಗಮನಕ್ಕೆ ತಂದು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು. ಒಟ್ಟಾರೆ ಶಾಲಾ ಮಕ್ಕಳ ಸುರಕ್ಷತೆಗೆ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸುವಂತೆ ಎಲ್ಲಾ ಶಾಲಾ ಮುಖ್ಯಸ್ಥರು, ಉಸ್ತುವಾರಿ ಅಧಿಕಾರಿ/ಸಿಬ್ಬಂದಿಗಳಿಗೆ ಶಿಕ್ಷಣ ಇಲಾಖೆ ಆಯುಕ್ತರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read