ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಸಮಯದಲ್ಲಿ ಅಪಘಾತವಾದಲ್ಲಿ ಮೂರನೇ ವ್ಯಕ್ತಿಗೆ ವಿಮಾ ಕಂಪನಿಗಳಿಂದ ಪರಿಹಾರ ಮೊತ್ತ ಪಡೆಯುವುದನ್ನು ತಪ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಮೋಟಾರ್ ವಾಹನಗಳ ಕಾಯ್ದೆ -1988ಕ್ಕೆ ತಿದ್ದುಪಡಿ ತರಬೇಕು ಎಂದು ಹೈಕೋರ್ಟ್ ಆದೇಶಿಸಿದೆ.
ಮದ್ಯಪಾನ ಮಾಡಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದಾಗ ಅಪಘಾತಕ್ಕೆ ಒಳಗಾದ ಪ್ರಕರಣದಲ್ಲಿ ಬೆಂಗಳೂರಿನ ಪ್ರತೀಕ್ ಕುಮಾರ್ ತ್ರಿಪಾಠಿಗೆ 2.59 ಲಕ್ಷ ರೂ. ಪರಿಹಾರ ಪಾವತಿಸಲು ಆದೇಶಿಸಿದ ಮೋಟಾರ್ ವಾಹನಗಳ ಅಪಘಾತ ಪರಿಹಾರ ನ್ಯಾಯಾಧೀಕರಣದ ಆದೇಶ ಪ್ರಶ್ನಿಸಿ ಓರಿಯಂಟಲ್ ಇನ್ಸೂರೆನ್ಸ್ ಕಂಪನಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು.
ಈ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ಉಮೇಶ್ ಅಡಿಗ ಅವರ ಪೀಠ ಈ ಪ್ರಕರಣದಲ್ಲಿ ಮೋಟಾರ್ ವಾಹನ ಚಾಲಕ ಮದ್ಯಪಾನ ಮಾಡಿದ್ದ. ಹೀಗಾಗಿ ಪರಿಹಾರ ನೀಡಬೇಕಾದ್ದು ವಾಹನದ ಮಾಲೀಕನ ಹೊಣೆಗಾರಿಕೆಯಾಗಿದೆ. ಆದರೆ, ನ್ಯಾಯಾಧಿಕರಣ ಎದುರಿಗೆ ಬಂದ ವಾಹನದ ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎಂದಿದೆ. ಹೀಗಾಗಿ ಪ್ರತೀಕ್ ಗೆ ಪರಿಹಾರ ನೀಡಲು ವಿಮೆ ಘೋಷಿಸಿದೆ. ಆದರೆ, ಪ್ರತೀಕ್ ಮದ್ಯ ಸೇವನೆ ಮಾಡಿ ವಾಹನ ಚಾಲನೆ ಮಾಡಿದ್ದ ಅಂಶವನ್ನು ಪರಿಗಣಿಸದೆ ವಿಮಾ ಕಂಪನಿಗೆ ಪರಿಹಾರ ಪಾವತಿಸಬೇಕು ಎಂದು ನ್ಯಾಯಾಧೀಕರಣ ಆದೇಶಿಸಿರುವುದು ಸರಿಯಲ್ಲ. ಆ ಮೊತ್ತವನ್ನು ಕಾನೂನು ಪ್ರಕಾರ ವಾಹನದ ಮಾಲೀಕರಿಂದ ವಸಲು ಮಾಡಿಕೊಳ್ಳಬೇಕಿದೆ ಎಂದು ಹೈಕೋರ್ಟ್ ಆದೇಶಿಸಿದೆ.
ಅಲ್ಲದೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದು ಸಾಮಾಜಿಕ ಅಪರಾಧವಾಗಿದೆ. ಪರಿಹಾರ ಪಾವತಿಗೆ ವಿಮಾ ಕಂಪನಿಯನ್ನು ಹೊಣೆ ಮಾಡಿ ಆದೇಶ ನೀಡುವುದರಿಂದ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಅಪಾಯಕಾರಿ ಪ್ರವೃತ್ತಿ ಉತ್ತೇಜಿಸಿದಂತಾಗುತ್ತದೆ.
ಹೀಗಾಗಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಪ್ರಕರಣದಲ್ಲಿ ಅಪಘಾತಗಳಾದರೆ ಪರಿಹಾರ ಪಾವತಿ ಹೊಣೆಯಿಂದ ವಿಮಾ ಕಂಪನಿಯನ್ನು ಮುಕ್ತಗೊಳಿಸಲು ಮೋಟಾರ್ ವಾಹನ ಕಾಯ್ದೆ -1988ಕ್ಕೆ ತಿದ್ದುಪಡಿ ತರಬೇಕು ಎಂದು ಕೇಂದ್ರ, ರಾಜ್ಯ ಸರ್ಕಾರಕ್ಕೆ ನ್ಯಾಯಪೀಠ ಆದೇಶಿಸಿದೆ.