ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಬೇರೊಬ್ಬರ ಹೆಸರಲ್ಲಿ ಆಸ್ತಿ ನೋಂದಣಿ ಮಾಡಿ ವಂಚಿಸಿರುವುದು ಸಾಬೀತಾದಲ್ಲಿ ಅಂತಹ ನೋಂದಣಿಯನ್ನು ರದ್ದುಪಡಿಸುವ ಅಧಿಕಾರವನ್ನು ಜಿಲ್ಲಾ ನೋಂದಣಿ ಅಧಿಕಾರಿಗಳಿಗೆ ನೀಡಲು ಉದ್ದೇಶಿಸಲಾಗಿದೆ. ಈ ಬಗ್ಗೆ ಕರಡು ನಿಯಮವನ್ನು ಈ ತಿಂಗಳಲ್ಲಿ ಪ್ರಕಟಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿಗೌಡ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ನಕಲಿ ದಾಖಲೆ, ನಕಲಿ ವ್ಯಕ್ತಿಗಳನ್ನು ಸೃಷ್ಟಿಸಿ ಆಸ್ತಿ ನೋಂದಣಿ ಮಾಡಿಕೊಂಡ ಮೇಲೆ ವಂಚನೆಗೆ ಒಳಗಾದವರು ಕೋರ್ಟ್ ಗೆ ಹೋಗಬೇಕಾಗುತ್ತದೆ. ಕೋರ್ಟ್ ಗೆ ಹೋದಲ್ಲಿ ಪ್ರಕರಣ ಇತ್ಯರ್ಥವಾಗಲು ವರ್ಷಗಟ್ಟಲೇ ಕಾಯಬೇಕಾಗುತ್ತದೆ. ಹೀಗಾಗಿ ಇಂತಹ ವಂಚನೆ ಪ್ರಕರಣಗಳು ಸಾಬೀತಾದಲ್ಲಿ ಅಂತಹ ನೋಂದಣಿ ರದ್ದು ಮಾಡುವ ಅಧಿಕಾರವನ್ನು ಜಿಲ್ಲಾ ನೋಂದಣಿ ಅಧಿಕಾರಿಗಳಿಗೆ ನೀಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.