ಬೆಂಗಳೂರು: ನಮ್ಮ ಸರ್ಕಾರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ವರದಿಯನ್ನು ಒಪ್ಪಿಕೊಂಡು ಜಾರಿ ಮಾಡಲು ಸಿದ್ಧವಿದೆ. ಮೀಸಲಾತಿ ಪ್ರಮಾಣವನ್ನು ಶೇ 70-75 ಕ್ಕೆ ಹೆಚ್ಚಿಸುವ ಬಗ್ಗೆಯೂ ಆಸಕ್ತಿ ಹೊಂದಿದೆ. ನನಗೆ ಕೊನೆಯ ಉಸಿರು ಇರುವವರೆಗೂ, ನಾನು ರಾಜಕಾರಣದಲ್ಲಿ ಇರುವವರೆಗೂ ಸಾಮಾಜಿಕ ನ್ಯಾಯದ ಪರವಾಗಿ ಇರುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ “ಎಲ್.ಜಿ.ಹಾವನೂರು ವರದಿಯ ಸುವರ್ಣ ಮಹೋತ್ಸವ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹಿಂದುಳಿದವರು, ದಲಿತರು ಸೇರಿದಂತೆ ಶೂದ್ರ ಸಮುದಾಯದವರು ತಮ್ಮ ವಿರೋಧಿಗಳಾದ ಬಿಜೆಪಿ – ಆರ್.ಎಸ್.ಎಸ್ – ಎಬಿವಿಪಿ ಸೇರುತ್ತಾರಲ್ಲಾ ಇವರಿಗೆ ಏನು ಹೇಳೋದು? ಬಿಜೆಪಿ – ಆರ್.ಎಸ್.ಎಸ್ ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರುತ್ತಾರಲ್ಲಾ ಇದಕ್ಕೇನು ಮಾಡೋದು? ದೇವರು, ಧರ್ಮದ ಹೆಸರಲ್ಲಿ ಸಾಯುತ್ತಾ ಇರೋರೆಲ್ಲಾ ನಮ್ಮ ಹಿಂದುಳಿದವರೇ. ಸ್ವಾರ್ಥಕ್ಕಾಗಿ ಬಿಜೆಪಿ – ಆರ್.ಎಸ್.ಎಸ್ ಸೇರಿ ಇವರೇ ಮೂಲ ಆರ್.ಎಸ್.ಎಸ್ ನವರಿಗಿಂತ, ಹೆಡಗೆವಾರ್ ರೀತಿ ಮಾತಾಡ್ತಾರೆ ಎಂದರು.
ಹಾವನೂರು ವರದಿಯನ್ನು ದೇವರಾಜ ಅರಸರು ಹಿಂದುಳಿದವರ ಬೈಬಲ್ ಎಂದು ಕರೆದಿದ್ದಾರೆ. ಸುಪ್ರೀಂಕೋರ್ಟ್ ಕೂಡ ಹಾವನೂರು ವರದಿಯನ್ನು ಅಪಾರವಾಗಿ ಮೆಚ್ಚಿಕೊಂಡಿದೆ. ಸಾಮಾನ್ಯ ಹಳ್ಳಿಯ ಪರಿಶಿಷ್ಟ ಕುಟುಂಬದಲ್ಲಿ ಹುಟ್ಟಿದ ಹಾವನೂರು ಅವರು ವಿದ್ಯಾರ್ಥಿ ದೆಸೆಯಲ್ಲೇ ಪ್ರತಿಭಟನೆ ಮಾಡುವ ಗುಣ ಹೊಂದಿದ್ದರು. ಹಾವನೂರು ಅವರು ಬೇಡರ ಜಾತಿಯ ಮೊದಲ ವಕೀಲರಾಗಿದ್ದರು ಎಂದರು.
ನಾನು ಹಣಕಾಸು ಮಂತ್ರಿಯಾದಾಗ, “ಈ ಸಿದ್ದರಾಮಯ್ಯಂಗೆ ನೂರು ಕುರಿ ಎಣಿಸೋಕೆ ಬರಲ್ಲ ಬಜೆಟ್ ಮಂಡಿಸ್ತಾರಾ” ಎಂದು ಪತ್ರಿಕೆಯೊಂದರಲ್ಲಿ ಬರೆದಿದ್ದರು. ಇದನ್ನು ನಾನು ಸವಾಲಾಗಿ ಸ್ವೀಕರಿಸಿದೆ. 16 ಬಜೆಟ್ ಮಂಡಿಸಿದೆ. 17ನೇ ಬಜೆಟನ್ನೂ ಮಂಡಿಸುತ್ತೇನೆ. ನನಗೆ ಅವಕಾಶ ಸಿಕ್ಕಿದ್ದರಿಂದ ನಾನು ಇಷ್ಟೆಲ್ಲಾ ಮಾಡಲು ಸಾಧ್ಯವಾಯಿತು. ಅವಕಾಶ ಸಿಗದಿದ್ದರೆ ನನ್ನಿಂದ ಇದನ್ನು ಮಾಡಲು ಸಾಧ್ಯವಿರಲಿಲ್ಲ. ಆದ್ದರಿಂದ ದಮನಿತ ಜಾತಿಗಳಿಗೆ ಅವಕಾಶ ಮುಖ್ಯ ಎಂದರು.
ಬೇಡರ ಜಾತಿಯಲ್ಲಿ ಜನಿಸಿದ ಹಾವನೂರು ಅವರು ತಮ್ಮ ಸಾಮರ್ಥ್ಯ ತೋರಿಸಿದ್ದಾರೆ. ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕಾಗ ಹೊರಗೆ ಬರುತ್ತದೆ. ನಾನು 1991 ರಲ್ಲಿ ಲೋಕಸಭೆಗೆ ಸ್ಪರ್ಧಿಸಿ ಸೋತಿದ್ದೆ. ಆಗ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದೆ. ನನ್ನ ಅರ್ಜಿ ಪರವಾಗಿ ಹಾವನೂರು ಅವರು ವಾದಿಸಿದ್ದರು. ಆ ಸಂದರ್ಭದಲ್ಲಿ ನಾನು ಹಾವನೂರು ಅವರ ಜೊತೆ ಆತ್ಮೀಯತೆ ಬೆಳೆದಿತ್ತು ಎಂದು ಸ್ಮರಿಸಿದರು.
ಎಲ್ಲಿಯವರೆಗೂ ಜಾತಿ ವ್ಯವಸ್ಥೆ ಇರುತ್ತದೋ ಅಲ್ಲಿಯವರೆಗೂ ಮೀಸಲಾತಿ ಇರಬೇಕು ಎನ್ನುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಮಾತಾಗಿತ್ತು. ನಮ್ಮಲ್ಲಿ ಶಿಕ್ಷಣ ಪ್ರಮಾಣ ಶೇ68 ರಷ್ಟಿದ್ದರೂ ಜಾತಿ ವ್ಯವಸ್ಥೆ ಇನ್ನಷ್ಟು ಗಟ್ಟಿಯಾಗುತ್ತಿದೆ. ಜಾತಿ ವ್ಯವಸ್ಥೆಯಿಂದ ಅನುಕೂಲ ಮಾಡಿಕೊಂಡವರು ಈ ವ್ಯವಸ್ಥೆಯನ್ನು ಗಟ್ಟಿಗೊಳಿಸುತ್ತಿದ್ದಾರೆ. ಹಿಂದುಳಿದವರು ಇನ್ನೂ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬಂದಿಲ್ಲ. ಮೇಲು ಜಾತಿಯ ಬಡವರನ್ನೂ ಬಹುವಚನದಿಂದ ಕರೆಯುವುದು, ಕೆಳ ಜಾತಿಯ ಶ್ರೀಮಂತರನ್ನು ಏಕವಚನದಲ್ಲಿ ಕರೆಯುವುದೇ ಗುಲಾಮಿ ಮನಸ್ಥಿತಿಯ ಸಂಕೇತ ಎಂದು ಹೇಳಿದರು.
ರಾಹುಲ್ ಗಾಂಧಿಯವರಿಗೆ ಸೈದ್ಧಾಂತಿಕ ಬದ್ಧತೆ ಇದ್ದಿದ್ದರಿಂದಲೇ ದೇಶಾದ್ಯಂತ ಜಾತಿ ಗಣತಿಗೆ ಒತ್ತಡ ಹೇರಿದರು. ಮೊನ್ನೆ ನನಗೂ “ಏನಾಯ್ತು ನಿಮ್ಮ ಗಣತಿ” ಎಂದು ಕೇಳಿದರು. ರಾಹುಲ್ ಗಾಂಧಿಯವರಿಗೆ ಸ್ಪಷ್ಟತೆ ಇರುವುದರಿಂದಲೇ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ಜಾತಿ ಗಣತಿ ನಡೆಸುವಂತೆ ಮಾಡಿದ್ದಾರೆ. ನಮ್ಮ ಸರ್ಕಾರ ಕೂಡ ಈ ಗಣತಿಯನ್ನು ಒಪ್ಪಿಕೊಂಡು ಜಾರಿಮಾಡಲು ಬದ್ಧವಾಗಿದೆ ಎಂದರು.
ಸಚಿವರಾದ ಶಿವರಾಜ್ ತಂಗಡಗಿ, ಬೈರತಿ ಸುರೇಶ್, ಮಾಜಿ ಸಚಿವರಾದ ಹೆಚ್.ಎಂ.ರೇವಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷರಾದ ರಾಮಚಂದ್ರಪ್ಪ, ಹಿರಿಯ ನ್ಯಾಯವಾದಿ ಪ್ರೊ|| ರವಿವರ್ಮ ಕುಮಾರ್ ಸೇರಿದಂತೆ ಹಿಂದುಳಿದ ವರ್ಗಗಳ ಸಮುದಾಯಗಳ ಮುಖಂಡರುಗಳು ಉಪಸ್ಥಿತರಿದ್ದರು.
