ನವದೆಹಲಿ: ಕರ್ನಾಟಕ ಸರ್ಕಾರವು ಉಚಿತವಾಗಿ ಭೂಮಿ ಮತ್ತು ಯೋಜನಾ ವೆಚ್ಚದ ಶೇಕಡ 50ರಷ್ಟು ಮೊತ್ತ ಭರಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಶಿವಮೊಗ್ಗ -ಹರಿಹರ ನಡುವಿನ ರೈಲ್ವೆ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ.
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಲೋಕಸಭೆಗೆ ಬುಧವಾರ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ದಾವಣಗೆರೆಯ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು 79 ಕಿಲೋಮೀಟರ್ ಉದ್ದದ ಶಿವಮೊಗ್ಗ -ಹರಿಹರ ರೈಲು ಮಾರ್ಗಕ್ಕೆ 832 ಕೋಟಿ ರೂಪಾಯಿ ವೆಚ್ಚವಾಗಲಿದೆ. ಈ ಯೋಜನೆಗಾಗಿ ಅನುಮೋದನೆ ನೀಡಲಾಗಿತ್ತು. ಆದರೆ ಯೋಜನೆಗೆ ಅಗತ್ಯವಾದ 488 ಹೆಕ್ಟೇರ್ ಜಾಗವನ್ನು ರಾಜ್ಯ ಸರ್ಕಾರ ಸ್ವಾಧೀನಪಡಿಸಿಕೊಂಡು ಉಚಿತವಾಗಿ ಹಸ್ತಾಂತರಿಸಬೇಕು. ಯೋಜನಾ ಮೊತ್ತದ ಶೇಕಡ 50ರಷ್ಟು ವೆಚ್ಚ ಭರಿಸಬೇಕು ಎಂದು ಒಪ್ಪಂದ ಮಾಡಿಕೊಳ್ಳಲಾಗಿತ್ತು. ಈಗ ರಾಜ್ಯ ಸರ್ಕಾರ ಈ ಒಪ್ಪಂದದಿಂದ ಹಿಂದಕ್ಕೆ ಸರಿದಿರುವುದರಿಂದ ಶಿವಮೊಗ್ಗ -ಹರಿಹರ ನಡುವಿನ ರೈಲು ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.