ಬೆಂಗಳೂರು: ಬಿಹಾರ ಮಾದರಿಯಲ್ಲಿಯೇ ರಾಜ್ಯದಲ್ಲಿಯೂ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ನಡೆಸಲಾಗುವುದು. ರಾಜ್ಯದ ಎಲ್ಲಾ ಮತದಾರರು ಪರಿಷ್ಕರಣೆಗೆ ಒಳಪಡಲಿದ್ದಾರೆ. ಮತದಾರರ ಗುರುತಿನ ಚೀಟಿ, ಮತದಾರರ ಪಟ್ಟಿ ಮತ್ತು ಮತಗಟ್ಟೆಗಳು ಬದಲಾಗಲಿವೆ.
23 ವರ್ಷದ ಹಿಂದೆ ಮತಪಟ್ಟಿಯ ವಿಶೇಷ ಪರಿಷ್ಕರಣೆ ನಡೆದಿತ್ತು. ಈಗ ಕೇಂದ್ರ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸುತ್ತಿದ್ದಂತೆ ರಾಜ್ಯದಲ್ಲಿಯೂ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ಗೆ ರಾಜ್ಯ ಚುನಾವಣಾ ಆಯೋಗ ಸಜ್ಜಾಗಿದೆ.
ಪೌರತ್ವ ಕಾಯ್ದೆಯ ಪ್ರಕಾರ ರಾಜ್ಯದಲ್ಲಿ ಎಲ್ಲಾ ಅರ್ಹ ನಾಗರೀಕರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಮತ್ತು ಅನರ್ಹರನ್ನು ಪಟ್ಟಿಯಿಂದ ತೆಗೆದು ಹಾಕುವುದು ಈ ವಿಶೇಷ ಸಮಗ್ರ ಪರಿಷ್ಕರಣೆಯ ಮುಖ್ಯ ಉದ್ದೇಶವಾಗಿದೆ. ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ವಿಶೇಷ ಸಮಗ್ರ ಪರಿಷ್ಕರಣೆಗೆ ಸಿದ್ಧತೆ ನಡೆಸಿದ್ದು, ಸೆಪ್ಟೆಂಬರ್ 25ಕ್ಕೆ ಪೂರ್ಣಗೊಳ್ಳಲಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದ್ದಾರೆ.
ರಾಜ್ಯದಲ್ಲಿ 2002 ರಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆದಿತ್ತು. 23 ವರ್ಷಗಳ ನಂತರ ಪರಿಷ್ಕರಣೆಗೆ ನಿರ್ಧರಿಸಲಾಗಿದೆ. ಎರಡೂವರೆಯಿಂದ ಮೂರು ತಿಂಗಳೊಳಗೆ ಪ್ರಕ್ರಿಯೆ ಮುಕ್ತಾಯವಾದ ಬಳಿಕ ಹೊಸ ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಅದರಲ್ಲಿರುವ ಮತದಾರರ ಪ್ರಸ್ತುತ ಪಟ್ಟೆಯಲ್ಲಿ ಇದ್ದಾರೆಯೇ ಎಂಬುದನ್ನು ಖಚಿತಪಡಿಸಲಾಗುವುದು. ಬೂತ್ ಮಟ್ಟದ ಅಧಿಕಾರಿಗಳು ಪ್ರತಿ ಮನೆಮನೆಗೆ ತೆರಳಿ ಪರಿಷ್ಕರಣೆ ಮಾಡಲಿದ್ದಾರೆ. ಎರಡು ಕಡೆ ಹೆಸರು ಇದ್ದರೆ ಫೋಟೋ ಸ್ಕ್ಯಾನಿಂಗ್ ಸಿಸ್ಟಮ್ ಮೂಲಕ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲಾಗುವುದು. ಒಂದೇ ವ್ಯಕ್ತಿ ಎರಡು ಕಡೆ ಅರ್ಜಿ ಹಾಕಿದರೆ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಲಾಗಿದೆ.