ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಿಂದ ಶಿಕ್ಷಕರಿಗೆ ಯಾವುದೇ ವಿನಾಯಿತಿ ನೀಡಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಸುಪ್ರೀಂ ಕೋರ್ಟ್ ಆದೇಶ, ಕೇಂದ್ರ ಚುನಾವಣಾ ಆಯೋಗದ ನಿರ್ದೇಶನ, ಮಾರ್ಗಸೂಚಿಗಳಲ್ಲಿ ಶಿಕ್ಷಕರನ್ನು ರಜೆ, ಬೋಧಕೇತರ ದಿನ, ಸಮಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಚುನಾವಣಾ ಕಾರ್ಯಕ್ಕೆ ನಿಯೋಜಿಸಬಹುದು ಎಂದು ತಿಳಿಸಲಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರು ಇತ್ತೀಚೆಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಶಾಲಾ ಶಿಕ್ಷಕರನ್ನು ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ನಿಯೋಜಿಸಿರುವುದನ್ನು ಹಿಂಪಡೆಯುವಂತೆ ಡಿಸಿಗೆ ನಿರ್ದೇಶಿಸುವಂತೆ ಕೋರಿದ್ದರು.
ಈ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳು/ ಜಿಲ್ಲಾ ಚುನಾವಣಾಧಿಕಾರಿಗಳು, ಅಪರ ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಜಂಟಿ ಮುಖ್ಯ ಚುನಾವಣಾ ಅಧಿಕಾರಿ ಎಸ್. ಯೋಗೇಶ್ವರ್ ಪತ್ರ ಬರೆದು ಸ್ಪಷ್ಟನೆ ನೀಡಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶ ಮತ್ತು ಕೇಂದ್ರ ಚುನಾವಣಾ ಆಯೋಗದ ನಿರ್ದೇಶನ ಮಾರ್ಗಸೂಚಿ ಪಾಲಿಸಬೇಕು. ಅಂತೆಯೇ ಸ್ಥಳೀಯ ಸಂಸ್ಥೆಗಳ ಕಾಯಂ ನೌಕರರಿಗೆ ಮೊದಲನೇ ಪ್ರಾಶಸ್ತ್ಯ ನೀಡಬೇಕು. ಒಂದು ವೇಳೆ ಲಭ್ಯವಿಲ್ಲದಿದ್ದರೆ ಅಂಗನವಾಡಿ, ಗುತ್ತಿಗೆ ಶಿಕ್ಷಕರು ಅಥವಾ ಕೇಂದ್ರ ಸರ್ಕಾರದ ನೌಕರರನ್ನು ಬಿಎಲ್ಒ ಆಗಿ ನೇಮಿಸಬೇಕು. ಶಿಕ್ಷಕರನ್ನು ರಜೆ, ಬೋಧಕೇತರ ದಿನ, ಸಮಯದಲ್ಲಿ ನೇಮಿಸಬಹುದು. ವಿನಾಯಿತಿ ಇರುವುದಿಲ್ಲ. ಯಾವುದೇ ಸಮಯದಲ್ಲಿ ನಿಯೋಜಿಸಬಹುದು. ರಾಷ್ಟ್ರಮಟ್ಟದಲ್ಲಿ ತರಬೇತಿ ಕಾರ್ಯಕ್ರಮಗಳು ನಡೆಯುತ್ತಿದ್ದು, ಎಲ್ಲಾ ನೌಕರರು ಹಾಜರಾಗಲು ಕ್ರಮ ಕೈಗೊಳ್ಳಬೇಕೆಂದು ಚುನಾವಣಾ ಆಯೋಗ ಸೂಚಿಸಿದೆ.

