ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಪರಿಸ್ಥಿತಿ ಹಿನ್ನೆಲೆಯಲ್ಲಿ ಪೊಲೀಸರು ಹಿಂದೂ ಸಂಘಟನೆಗಳ ಮುಖಂಡರು, ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ.
ಜಿಲ್ಲೆಯಲ್ಲಿ ಸಾಲು ಸಾಲು ಹತ್ಯೆ ಪ್ರಕರಣದ ಬೆನ್ನಲ್ಲೇ ಸರ್ಕಾರದ ವಿರುದ್ಧ, ಗೃಹ ಸಚಿವ ಪರಮೇಶ್ವರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಮುಸ್ಲೀಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಇದೀಗ ಹಿಂದೂ ಮುಖಂಡರ ವಿರುದ್ಧ ಪೊಲೀಸರು ಕ್ರಮಗಳನ್ನು ಕೈಗೊಳ್ಳುತ್ತಿರುವ ಬೆಳವಣಿಗೆಗಳು ನಡೆದಿದೆ. ಈಗಾಗಲೇ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ 15 ಹಿಂದೂ ಮುಖಂಡರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಇದೀಗ ಅರುಣ್ ಪುತ್ತಿಲ ಅವರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ.
ಬಿಜೆಪಿ ಮುಖಂಡ, ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡಿಪಾರು ನೋಟಿಸ್ ಜಾರಿ ಮಾಡಿದ್ದಾರೆ.
ಕರ್ನಾಟಕ ಪೊಲೀಸ್ ಅಧಿನಿಯಮ 1963 ಕಲಂ: 58ರ ಅಡಿಯಲ್ಲಿ ನೋಟಿಸ್ ನೀಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.