ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರದು ಆತ್ಮಹತ್ಯೆಯಲ್ಲ, ಅದೊಂದು ಕೊಲೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಸಕರ ವಿರುದ್ಧ ಎಫ್ಐಆರ್ ದಾಖಲಾಗದ ವಿಚಾರದ ಬಗ್ಗೆ ಕಿಡಿಕಾರಿದ್ದು, ಅಧಿಕಾರದ ದರ್ಪದಿಂದ ಕಾಂಗ್ರೆಸ್ ನವರು ಹೇಳಿಕೆ ನೀಡುತ್ತಿದ್ದಾರೆ. ವಿನಯ್ ಸೋಮಯ್ಯ ಅವರದು ಆತ್ಮಹತ್ಯೆಯಲ್ಲ, ಅದೊಂದು ಕೊಲೆ. ಇದರ ಹಿಂದೆ ಯಾವೆಲ್ಲಾ ದುಷ್ಟ ಶಕ್ತಿಗಳು ಇವೆ ಎಂದು ಎಲ್ಲರಿಗೂ ಗೊತ್ತಿದೆ. ಅವರಿಗೆ ಶಿಕ್ಷೆ ಆಗಲೇಬೇಕು. ನಾವು ಕಾನೂನು ಹೋರಾಟ ಮಾಡುತ್ತೇವೆ. ಕಾನೂನು ತಜ್ಞರೊಂದಿಗೆ ಮುಂದಿನ ಹೋರಾಟದ ಕುರಿತಾಗಿ ಚರ್ಚೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.