ಹಾಸನ: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ತಮ್ಮನ್ನು ಆಹ್ವಾನಿಸಿದ್ದಕ್ಕೆ ಅಪಸ್ವರ ಎತ್ತಿದವರ ವಿರುದ್ಧ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು, ಕೋಟ್ಯಂತರ ಕನ್ನಡಿಗರು ಎಷ್ಟೊಂದು ಪ್ರೀತಿ, ಅಭಿಮಾನ ಕೊಡುತ್ತಿದ್ದಾರೆ. ಒಬ್ಬರು ಅಥವಾ ಇಬ್ಬರ ನೆಗೆಟಿವ್ ಗೆ ಯಾಕೆ ಪ್ರತಿಕ್ರಿಯೆ ಕೊಡಬೇಕು ಎಂದು ಪ್ರಶ್ನಿಸಿದ್ದಾರೆ.
ವಿರೋಧ ಪಕ್ಷಗಳು ಮತ್ತು ಆಡಳಿತ ಪಕ್ಷಗಳು ರಾಜಕೀಯ ಮಾಡಬೇಕು. ಆದರೆ ಯಾವುದರಲ್ಲಿ ರಾಜಕೀಯ ಮಾಡಬೇಕೆಂಬ ಪ್ರಜ್ಞೆ ಇರಬೇಕಾಗುತ್ತದೆ. ಬಿಜೆಪಿಯಲ್ಲಿ ಸಂಸದ ಯದುವೀರ್ ಅಂತಹವರ ಸಂತತಿ ಹೆಚ್ಚಾಗಲಿ. ವಿಷಯ ಅನ್ವೇಷಣೆ ಮಾಡಿ ಆ ಬಗ್ಗೆ ದ್ವಂದ್ವ ಇಲ್ಲದೆ ಹೇಳಿಕೆ ನೀಡಬೇಕು. ಬೂಕರ್ ನಂತಹ ಪ್ರಶಸ್ತಿ ಸಿಗುವುದು ಸುಲಭದ ಮಾತಲ್ಲ. ಅದರ ಬಗ್ಗೆಯೂ ಒಂದಿಬ್ಬರು ಬಹಳ ಕೇವಲವಾಗಿ ಮಾತನಾಡುತ್ತಾರೆ. ಆ ಬಗ್ಗೆ ಮಾತನಾಡಲಿ ನನಗೆ ಬೇಸರವಿಲ್ಲ. ಅವರವರ ಮಟ್ಟಕ್ಕೆ ತಕ್ಕ ಹಾಗೆ ಮಾತನಾಡುತ್ತಾರೆ ಮಾತನಾಡಲಿ ಎಂದು ಪರೋಕ್ಷವಾಗಿ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.
ಕನ್ನಡದ ಬಾವುಟದ ಬಗ್ಗೆ ಹೇಳಿಕೆ ವಿಚಾರದ ಬಗ್ಗೆ ತಮ್ಮ ವಿರುದ್ಧದ ಆರೋಪಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ಕನ್ನಡವನ್ನು ನನ್ನಷ್ಟು ಪ್ರೀತಿಸಿ, ಕನ್ನಡವನ್ನು ನನ್ನಷ್ಟು ಬಳಕೆ ಮಾಡಿ, ಕನ್ನಡವನ್ನು ನನ್ನಷ್ಟು ಅಂತರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿ ಅಲ್ಲಿನವರ ಬಾಯಲ್ಲಿ ಕನ್ನಡ ಎಂದು ಹೇಳಿಸುತ್ತಿದ್ದೇನೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಕನ್ನಡದ ಒಂದೊಂದು ಪುಟ ಓದುತ್ತಿದ್ದೇನೆ. ಅವರು ಬಾಯಿ ಬಿಟ್ಟುಕೊಂಡು ನೋಡುತ್ತಿದ್ದಾರೆ. ನನ್ನಂತೆ ನೀವು ಸಾಧನೆ ಮಾಡಿದ್ರೆ ಟೀಕೆ ಮಾಡಲು ಅರ್ಹತೆ ಸಿಗುತ್ತದೆ. ಇಲ್ಲದೆ ಹೋದರೆ ನಿಮ್ಮ ಯಾವುದೇ ಮಾತಿನಲ್ಲಿ ಸ್ಪಷ್ಟತೆ ಇರುವುದಿಲ್ಲ. ನಂಬಿದವರನ್ನು ಕನ್ನಡ ಯಾವತ್ತೂ ಕೈ ಬಿಡಲ್ಲ. ಇದಕ್ಕೆ ನಾನೇ ಸಾಕ್ಷಿ ಎಂದು ಬಾನು ಮುಷ್ತಾಕ್ ಹೇಳಿದ್ದಾರೆ.