ಬೆಂಗಳೂರು: ರಾಜ್ಯದಲ್ಲಿ ಮಳೆಗಾಲದ ನಂತರ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸುವ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಪಕ್ಷದ ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ಮಳೆಗಾಲದ ನಂತರ ಪ್ರತ್ಯೇಕ ಸಭೆ ನಡೆಸಿ ಸಿದ್ಧತೆ ಮತ್ತು ದಿನಾಂಕದ ಬಗ್ಗೆ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.
ಮಂಗಳವಾರ ಸಂಜೆ ನಡೆದ ಶಾಸಕಾಂಗ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಿಷಯ ಪ್ರಸ್ತಾಪಿಸಿದ್ದಾರೆ.
2021 ರಿಂದಲೂ ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಚುನಾವಣೆ ನಡೆದಿಲ್ಲ. ರಾಜ್ಯದ 31 ಜಿಲ್ಲೆಗಳ 1130 ಜಿಲ್ಲಾ ಪಂಚಾಯಿತಿ, 239 ತಾಲೂಕುಗಳ 3671 ತಾಪಂ ಕ್ಷೇತ್ರಗಳಿಗೆ ಚುನಾವಣೆ ನಡೆಯಬೇಕಿದೆ. ನ್ಯಾಯಾಲಯದಿಂದಲೂ ತೀವ್ರ ಒತ್ತಡವಿದ್ದು, ಶೀಘ್ರವೇ ಚುನಾವಣೆಗೆ ಸಿದ್ಧತೆ ನಡೆಸಬೇಕು ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಳೆಗಾಲದ ನಂತರ ಪ್ರತ್ಯೇಕ ಸಭೆ ನಡೆಸಿ ಜಿಪಂ, ತಾಪಂ ಚುನಾವಣೆಗೆ ದಿನಾಂಕ ಅಂತಿಮಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ.