ಚಿತ್ರದುರ್ಗ: ಹೊಳಲ್ಕೆರೆ ಪೊಲೀಸ್ ಠಾಣೆ ಎದುರು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಚಿತ್ರದುರ್ಗ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
45 ವರ್ಷದ ಅಜ್ಜಯ್ಯ ಮೃತಪಟ್ಟವರು. ಹೊಳಲ್ಕೆರೆ ಠಾಣೆ ಪೊಲೀಸರ ನಿರ್ಲಕ್ಷ್ಯಕ್ಕೆ ಬೇಸತ್ತು ಅಜ್ಜಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅಜ್ಜಯ್ಯ ಅವರ ಪುತ್ರಿ ಮನೆ ಬಿಟ್ಟು ಹೋಗಿದ್ದಕ್ಕೆ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದರು. ಪುತ್ರಿಯನ್ನು ಕರೆದೊಯ್ದ ಯುವಕನ ವಿರುದ್ಧ ದೂರು ನೀಡಲು ಹೋಗಿದ್ದರು. ಪುತ್ರಿಯನ್ನು ಕರೆಸಿ ಮಾತನಾಡಲು ಅವಕಾಶ ಕೊಡಿ ಎಂದು ಅಜ್ಜಯ್ಯ ಪೊಲೀಸರಿಗೆ ಮನವಿ ಮಾಡಿದ್ದರು. ಆದರೆ ಅವರ ಮನವಿಗೆ ಸ್ಪಂದಿಸದ ಪೊಲೀಸರು ಅಲೆದಾಡಿಸಿದ್ದರು.
ಇದರಿಂದ ಮನನೊಂದು ಪೊಲೀಸ್ ಠಾಣೆ ಬಳಿಯೇ ಅಜ್ಜಯ್ಯ ವಿಷ ಸೇವಿಸಿದ್ದಾರೆ. ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹೊಳಲ್ಕೆರೆ ಪೊಲೀಸರ ವಿರುದ್ಧ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.