BIG NEWS: ರೆಡ್ಡಿ ದರ್ಬಾರ್ ಅವಧಿಯ ಸಾಲು ಸಾಲು ಘಟನೆಗಳನ್ನು ನೆನಪಿಸಿಕೊಂಡ ಸಿಎಂ

ಸಂಡೂರು: ವಿಧಾನಸಭಾ ಮೂರು ಕ್ಷೇತ್ರಗಳ ಉಪಚುನಾವಣಾ ಅಖಾಡ ರಂಗೇರಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಪರ ಭರ್ಜರಿ ಪರ್ಚಾರ ನಡೆಸಿದರು.

ಹಣ ಬಲ, ತೋಳು ಬಲದಲ್ಲಿ ಸಂಡೂರನ್ನು ವಶಪಡಿಸಿಕೊಳ್ಳಲು ಬರ್ತಾರೆ. ಜನರು ಜಾಗೃತರಾಗಿರಿ. ಬಿಜೆಪಿ ಸೋಲಿಸಿ ಬಳ್ಳಾರಿ ಉಳಿಸಿ ಎಂದು ಕರೆ ನೀಡಿದರು.

ಸಂಡೂರು ವಿಧಾನಸಭಾ ಕ್ಷೇತ್ರದ ಬನ್ನಿಹಟ್ಟಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರ ಗೆಲುವಿನ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಂದು ನಾನು ಬಳ್ಳಾರಿಗೆ ಬಂದಾಗ ರೆಡ್ಡಿ ಬ್ರದರ್ಸ್ ಮತ್ತು ಶ್ರೀರಾಮುಲು ನನಗೆ ಭಾಷಣ ಮಾಡಲು ಜಾಗ ಕೊಡದೆ ಅವಮಾನ ಮಾಡಿದ್ದರು. ದೇವಸ್ಥಾನದ ಬಾಗಿಲಲ್ಲಿ ಒಬ್ನೇ ನಿಂತು ಭಾಷಣ ಮಾಡಿ ಹೋಗಿದ್ದೆ ಎಂದರು.

ಒಂದು ಮನೆಗೆ ಹೋಗಿ ಕುಡಿಯೋಕೆ ನೀರು ಕೇಳಿದ್ರೂ ನನಗೆ ನೀರು ಕೊಡೋಕೂ ಜನ ಭಯ ಬೀಳ್ತಿದ್ರು ಎಂದು ರೆಡ್ಡಿ ದರ್ಬಾರ್ ಅವಧಿಯ ಘಟನೆಗಳನ್ನು ಉಲ್ಲೇಖಿಸಿದ ಸಿಎಂ ಸಿದ್ದರಾಮಯ್ಯ ಜನಾರ್ಧನ ರೆಡ್ಡಿ, ಶ್ರೀರಾಮುಲು ವಿರುದ್ಧ ಕಿಡಿಕಾರಿದ್ದಾರೆ.

ಅಕ್ರಮ ಗಣಿಗಾರಿಕೆ ವಿರುದ್ಧ, ರೆಡ್ಡಿ ಬ್ರದರ್ಸ್ ಬಳ್ಳಾರಿಯನ್ನು ಹಾಳು ಮಾಡಲು ಬಿಡಬಾರದು ಎಂದು ನಾನು ಬೆಂಗಳೂರಿನಿಂದ ಪಾದಯಾತ್ರೆ ಮಾಡಿದೆ. ಬಳ್ಳಾರಿ ಜನರನ್ನು ಭಯಮುಕ್ತಗೊಳಿಸಿದ್ದು ಕಾಂಗ್ರೆಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಜಿಂದಾಲ್ ಗೆ ಕಾಲಿಟ್ಟರೂ ಜಿಲ್ಲಾ ಮಟ್ಟದ ಅಧಿಕಾರಿಗಳೂ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಾಣಲು ಬರಲಿಲ್ಲ. ಆ ಮಟ್ಟದಲ್ಲಿ ಅಧಿಕಾರಿಗಳಲ್ಲಿ ಭಯ, ಭೀತಿ ಸೃಷ್ಟಿ ಮಾಡಿದ್ದರು. ಮತ್ತೆ ಏನಾದರೂ ಜನಾರ್ಧನ ರೆಡ್ಡಿ ಪಟಾಲಂ ಬಳ್ಳಾರಿಯಲ್ಲಿ ಬೆಳೆದರೆ ಮತ್ತೆ ಅದೇ ಭೀತಿ, ಭಯದಲ್ಲಿ ಬಳ್ಳಾರಿ ನರಳಬೇಕಾಗುತ್ತದೆ. ಆದ್ದರಿಂದ ಇದಕ್ಕೆ ಅವಕಾಶ ಕೊಡಬೇಡಿ. ಬಿಜೆಪಿಯನ್ನು ಸೋಲಿಸಿ ಬಳ್ಳಾರಿಯನ್ನು ಉಳಿಸಿ ಎಂದು ಕರೆ ನೀಡಿದರು.

ಸಂಡೂರಿನಲ್ಲಿ ರಸ್ತೆ, ನೀರು, ಶಾಲೆ, ಅಂಗನವಾಡಿ, ಆಸ್ಪತ್ರೆ, ಮೊಬೈಲ್ ಕ್ಲೀನಿಕ್ ಗಳು ಸೇರಿ ಏನೇನು ಅಭಿವೃದ್ಧಿ ಆಗಿದೆಯೋ ಅದೆಲ್ಲವೂ ಸಂತೋಷ್ ಲಾಡ್ ಮತ್ತು ತುಕಾರಾಮ್ ಅವರ ಅವಧಿಯಲ್ಲಿ ಮಾತ್ರ. ಬಿಜೆಪಿ ಅವಧಿಯಲ್ಲಿ ಲೂಟಿ ಲೂಟಿ ಲೂಟಿ ಮಾಡಿದ್ದು ಬಿಟ್ಟರೆ ಬೇರೇನೂ ಆಗಿಲ್ಲ ಎಂದು ವಾಗ್ದಾಳಿ ನಡೆಸಿದರು.

ಹೈದ್ರಾಬಾದ್ ಕರ್ನಾಟಕ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿ ಮಾಡಿದ್ದು ಕಾಂಗ್ರೆಸ್ . ನಮ್ಮ ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾಗಾಂಧಿ, ಮಲ್ಲಿಕಾರ್ಜುನ ಖರ್ಗೆ , ಧರಂಸಿಂಗ್ ಮತ್ತು ನಾನು ಸೇರಿ 371 ಜೆ ಜಾರಿ ಮಾಡಲು ಕಾರಣ. ಬಳಿಕ ನಾನು ಮುಖ್ಯಮಂತದರಿಯಾಗಿ 5000 ಕೋಟಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಅನುದಾನ ನೀಡಿದೆ. 371 ಜೆ ಬಂದಿದ್ದರಿಂದ ಇಲ್ಲಿನ ಮಕ್ಕಳು ಎಂಜಿನಿಯರ್ ಗಳಾದರು. ಡಾಕ್ಟರ್ ಗಳಾದರು. ಸರ್ಕಾರಿ ಕೆಲಸಕ್ಕೆ ಸಾವಿರಾರು ಸಂಖ್ಯೆಯಲ್ಲಿ ಸೇರಲು ಅವಕಾಶವಾಯಿತು.

ಈಗ ಅವರು ಅಕ್ರಮ ಗಣಿಗಾರಿಕೆಯ ಹಣದ ಚೀಲಗಳನ್ನು ಹೊತ್ತುಕೊಂಡು ಬಂದು ಕುಳಿತಿದ್ದಾರೆ. ಅವರ ಹಣಕ್ಕೆ ಮರುಳಾಗುತ್ತೀರಾ ? ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಭಾಗ್ಯದ ಬಾಗಿಲು ತೆರೆದ ಕಾಂಗ್ರೆಸ್ ಕೈ ಹಿಡಿಯುತ್ತೀರಾ ಪ್ರಾಮಾಣಿಕವಾಗಿ ಯೋಚಿಸಿ ನಿರ್ಧರಿಸಿ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read