ಚಾಮರಾಜನಗರ: ಕೇರಳದಲ್ಲಿ ಮೆದುಳು ತಿನ್ನುವ ವೈರಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳಲ್ಲಿಯೂ ಕಟ್ಟೆಚ್ಚರಕ್ಕೆ ಸೂಚನೆ ನೀಡಲಾಗಿದೆ.
ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ವಿಶೇಷವಾಗಿ ಗುಂಡ್ಲುಪೇಟೆಯ ಮೂಲೆಹೊಳೆ ಚಕ್ ಪೋಸ್ಟ್ ನಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಬರಿಮಲೆಗೆ ತೆರಳುವ ಭಕ್ತರಿಗೆ ಈ ರೋಗದ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.
ಗುಂಡ್ಲುಪೇಟೆ ತಾಲೂಕು ಆರೋಗ್ಯಾಧಿಕಾರಿ ಡಾ.ಅಲಿಂ ಪಾಷಾ ಬಿ.ಆರ್, ಹೇಳುವ ಪ್ರಕಾರ ಈ ವೈರಸ್ ನೆಗ್ಲೇರಿಯಾ ಪೌಲೇರಿ ಎಂಬ ಪರಾವಲಂಬಿಯಿಂದ ಬರುವ ಅಪರೂಪದ ಕಾಯಿಲೆ. ಕರ್ನಾಟಕದಲ್ಲಿ ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಕೇರಳದಲ್ಲಿ ಈ ಪ್ರಕರಣ ಹೆಚ್ಚುತ್ತಿರುವುದರಿಂದ ಕರ್ನಾಟಕದಲ್ಲಿಯೂ ಮುನ್ನೆಚ್ಚರಿಕೆ ಅಗತ್ಯ ಎಂದು ತಿಳಿಸಿದ್ದಾರೆ.
ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಸ್ವಚ್ಛತೆ ಕಾಪಾಡುವ ಕುರಿತು ಕರಪತ್ರಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಆರೋಗ್ಯ ಇಲಾಖೆ ಸಿಬ್ಬಂದಿ, ವೈದ್ಯಾಧಿಕಾರಿಗಳು ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
