ಮೈಸೂರು: ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಬಾನು ಮುಷ್ತಾಕ್ ಆಯ್ಕೆ ಮಾಡಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಇಂದು ಚಾಮುಂಡಿ ಚಲೋ ಹೋರಾಟ ಹಮ್ಮಿಕೊಂಡಿದೆ. ಚಾಮುಂಡಿ ಚಲೋ ಪ್ರತಿಭಟನೆ ಆರಂಭವಾಗುತ್ತಿದ್ದಂತೆಯೇ ಪೊಲೀಸರು ಬಿಜೆಪಿ ಶಾಸಕ ಶ್ರೀವತ್ಸ ಹಾಗೂ ಹಲವು ಹೋರಾಟಗಾರರನ್ನು ವಶಕ್ಕೆ ಪಡೆದಿದ್ದಾರೆ.
ಮತ್ತೊಂದೆಡೆ ಚಾಮುಂಡಿ ಚಲೋ ಹೋರಾಟದಲ್ಲಿ ಭಾಗಿಯಾಗಲು ಆಗಮಿಸಿದ್ದ ಹಿಂದೂ ಜಾಗರಣಾ ವೇದಿಕೆ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಜಿ ಶಾಸಕ ಎಲ್.ನಾಗೇಂದ್ರ, ಮಾಜಿ ಮೇಯರ್ ಸಂದೇಶ ಸ್ವಾಮಿ ನೇತೃತ್ವದಲ್ಲಿ ಹಿಂದೂ ಜಾಗರಣಾ ವೇದಿಕೆ ಸದಸ್ಯರು ಚಾಮುಂಡಿ ಬೆಟ್ಟದತ್ತ ತೆರಳಿದ್ದರು. ಈ ವೇಳೆ ಪೊಲೀಸರು ಬೆಟ್ಟಕ್ಕೆ ತೆರಳಲು ಬಿಟ್ಟಿಲ್ಲ.
ಇದರಿಂದ ಆಕ್ರೋಶಗೊಂಡ ಹೋರಾಟಗಾರರು ಪೊಲೀಸರ ಜೊತೆ ವಾಗ್ವಾದಕ್ಕೆ ಇಳಿದಿದ್ದಾರೆ. ಈ ವೇಳೆ ಪೊಲೀಸರ ನಡೆಗೆ ನಾಗೇಂದ್ರ ಕಿಡಿ ಕಾರಿದ್ದಾರೆ. ಅಲ್ಲದೇ ಯಾರೋ ಚಾಮುಂಡೇಶ್ವರಿ ದೇಗುಅ ಹಿಂದೂಗಳ ಆಸ್ತಿ ಅಲ್ಲ ಅಂದ್ರೆ ಆಗಲ್ಲ. ಚರ್ಚ್ ಮುಂದೆ ನಿಂತು ಆರೀತಿ ಹೇಳಿಕೊಟ್ಟರೆ ಸುಮ್ಮನಿರಲಾಗದು. ಈ ವಿಚಾರವಾಗಿ ಹೋರಾಟ ಮಾಡುತ್ತಿರುವವರ ಪರವಾಗಿ ನಾವಿದ್ದೇವೆ. ಪೊಲೀಸರನ್ನು ಬಳಸಿ ಹೋರಾಟ ಹತ್ತಿಕ್ಕಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಪೊಲೀಸರು ನಾಗೇಂದ್ರ ಸೇರಿದಂತೆ ಹಿಂದೂ ಜಾಗರಣಾ ವೇದಿಕೆ ಸದಸ್ಯರನ್ನು ವಶಕ್ಕೆ ಪಡೆದಿದ್ದಾರೆ.