ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದೆ. ಆರ್ ಸಿಬಿ ಅಭಿಮಾನಿಗಳ ಸಾವಿನ ಸಂಖ್ಯೆ 6 ಕ್ಕೆ ಏರಿಕೆಯಾಗಿದೆ.
ಆರ್ ಸಿಬಿ ಐಪಿಎಲ್ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ವಿಜಯೋತ್ಸವ ಕಾರ್ಯಕ್ರಮಕ್ಕೆ ಹಮ್ಮಿಕೊಳ್ಳಲಾಗಿತ್ತು. ತಮ್ಮ ನೆಚ್ಚಿನ ಆಟಗಾರರ ಸಂಭ್ರಮಾಚರಣೆ ನೋಡಲೆಂದು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಜನಸಾಗರವೇ ಹರಿದುಬಂದಿದೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ಪ್ರವಾಹದಂತೆ ಸ್ಟೇಡಿಯಂನತ್ತ ನುಗ್ಗಿದ ಆರ್ ಸಿಬಿ ಅಭಿಮಾನಿಗಳು ಗೇಟ್ ಗಳನ್ನು ಮುರಿದು ಒಳನುಗ್ಗುತ್ತಿದ್ದಂತೆ ಭಾರಿ ನೂಕು ನುಗ್ಗಲು ಉಂಟಾಗಿದೆ.
ಕಾಲ್ತುಳಿತದಲ್ಲಿ ಒಟ್ಟು 6 ಜನರು ಸಾವನ್ನಪ್ಪಿದ್ದಾರೆ. ನಾಲ್ವರು ವೈದೇಹಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರೆ, ಇಬ್ಬರು ಗಾಯಾಳುಗಳು ಬೌರಿಂಗ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನೂ 15ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.