ಬೆಂಗಳೂರು: 18 ವರ್ಷದ ಬಳಿಕ ಆರ್ ಸಿಬಿ ಐಪಿಎಲ್ ಕಪ್ ಗೆದ್ದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಂಭ್ರಮಾಚರಣೆ ನೋಡಲೆಂದು ಜನಸಾಗರವೇ ಹರಿದುಬಂದಿದೆ. ಸ್ಟೇಡಿಯಂ ಬಳಿ ನೂಕುನುಗ್ಗಲು ಉಂಟಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರಿ ಜನಸ್ತೋಮ ನೆರೆದಿದ್ದು, ಕ್ರೀಡಾಂಗಣದ ಗೇಟ್ ಗಳನ್ನು ಮುರುಇದು ಅಭಿಮಾನಿಗಳು ಒಳನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ತೀವ್ರ ಅಸ್ವಸ್ಥಗೊಂಡಿದ್ದ ವ್ಯಕ್ತಿಯನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಆತ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ.
ಇನ್ನು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 15 ಜನರು ಅಸ್ವಸ್ಥರಾಗಿದ್ದಾರೆ. ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಸ್ಟೇಡಿಯಂ ಬಳಿ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡುತ್ತಿದ್ದು, ಲಾಠಿಚಾರ್ಜ್ ಕೂಡ ನಡೆಸಿರುವ ಘಟನೆ ನಡೆದಿದೆ.