ಬೆಂಗಳೂರು: ಚಿನ್ನಸ್ವಾಮಿ ಸ್ಟೆಡಿಯಂನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಚಿನ್ನಸ್ವಾಮಿ ಸ್ಟೇಡಿಯಂಗೆ ತೆರಳಿ ಪರಿಶೀಲನೆ ನಡೆಸಿದರು.
ಕ್ರೀಡಾಂಗಣದ ಎಲ್ಲಾ ಗೇಟ್ ಗಳಿಗೆ ತೆರಳಿ ಪರಿಶೀಲಿಸಿ, ಕಬ್ಬನ್ ಪಾರ್ಕ್ ಪೊಲೀಸರಿಂದ ಮಾಹಿತಿ ಪಡೆದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್, ದುರಂತದ ಬಗ್ಗೆ ತನಿಖೆ ನಡೆಸಿ 15 ದಿನಗಳ ಒಳಗೆ ವರದಿ ನೀಡುವಂತೆ ಸರ್ಕಾರ ಆದೇಶ ನೀಡಿದೆ. ಘಟನೆ ಬಗ್ಗೆ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುವುದು. ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದ ಸದಸ್ಯರಿಗೆ ನೋಟಿಸ್ ನೀಡಿ ಅವರಿಂದಲೂ ಹೇಳಿಕೆ ಪಡೆಯಲಾಗುವುದು. ಸಾರ್ವಜನಿಕರು ಕೂಡ ಜೂನ್ 13ರಂದು ಬೆಳಿಗ್ಗೆ 10:30 ರಿಂದ 1:30ರವರೆಗೆ ಬಂದು ತಮ್ಮ ಹೇಳಿಕೆ ನೀಡಬಹುದು ಎಂದರು.
ಇನ್ನು ನಗರ ಪೊಲೀಸ್ ಆಯುಕ್ತರಿಗೆ ದುರಂತದ ಬಗ್ಗೆ ಸ್ಥಳದಲ್ಲಿದ್ದ ಪೊಲೀಸರಿಂದ ಹೇಳಿಕೆ ನೀಡುವ ನಿಟ್ಟಿನಲ್ಲಿ ಸಿಬ್ಬಂದಿಗಳ ಪಟ್ಟಿ ನೀಡಲು ಸೂಚಿಸುತ್ತೇವೆ ಎಂದರು.
ಘಟನೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಉನ್ನತ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುವುದು ಎಂದು ತಿಳಿಸಿದರು.
ಇನ್ನು ವಿಜಯೋತ್ಸವದ ವೇಳೆ ಕ್ರೀಡಾಂಗಣದ ಭದ್ರತೆ ಹೊಣೆ ಹೊತ್ತಿದ್ದ ಡಿಎನ್ ಎ ಇವೆಂಟ್ ಮ್ಯಾನೇಜ್ಮೆಂಟ್ , ವಿಜಯೋತ್ಸವದ ಆಯೋಜಕರಾಗಿದ್ದ ಆರ್ ಸಿಬಿ ಮ್ಯಾನೇಜ್ಮೆಂಟ್ ಗೂ ನೋಟಿಸ್ ನೀಡುವುದಾಗಿ ತಿಳಿಸಿದ್ದಾರೆ.