ಬೆಂಗಳೂರು: ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೇ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಮಡಿಕೇರಿ ಇವರ ವತಿಯಿಂದ ಬೆಂಗಳೂರಿನ ಜೆಸಿ ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ “2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ”ದಲ್ಲಿ ಭಾಗವಹಿಸಿ, ಪ್ರಶಸ್ತಿ ವಿಜೇತ ಗಣ್ಯರಿಗೆ ಅಭಿನಂದಿಸಿ ಅವರು ಮಾತನಾಡಿದರು.
ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಅರೆಭಾಷೆ ಗೌಡರು ಹೆಚ್ಚಾಗಿ ವಾಸಿಸುತ್ತಿದ್ದು, ಇವರ ಜನಸಂಖ್ಯೆ ಮೂರು ಲಕ್ಷಕ್ಕೂ ಹೆಚ್ಚಿದೆ. ಇವರು 1882ನೇ ಗೆಜೆಟ್ ಬಂದಾಗ ಸಕಲೇಶಪುರದಲ್ಲಿದ್ದು, ಬರಗಾಲದ ಸಂದರ್ಭದಲ್ಲಿ ಹೇಮಾವತಿ ನದಿ ಬತ್ತಿದಾಗ ಪಕ್ಕದ ಜಿಲ್ಲೆ ಸುಳ್ಯಕ್ಕೆ ಬಂದು ನೆಲೆಯೂರುತ್ತಾರೆ. ತುಳು, ಕೊಂಕಣಿ ಜೊತೆಗೆ ಕನ್ನಡ ಸೇರಿ ಅರೆಭಾಷೆಯಾಗಿದೆ. ಹೋಗುತ್ತೇನೆ ಎನ್ನುವುದು ವೋನೆ, ಬರುತ್ತೇನೆ ಎನ್ನುವುದು ಬನೇ ಎಂದು ಹೇಳುತ್ತಾರೆ. ಹೀಗೆ ಕೆಲವು ಅಕ್ಷರಗಳು ಬಿಟ್ಟುಹೋಗಿ ಅರೆಭಾಷೆಯಾಗಿದೆ. ಮೂಲತ: ಗೌಡ ಸಮುದಾಯಕ್ಕೆ ಸೇರಿರುವ ಇವರನ್ನು ಅರೆಭಾಷೆ ಗೌಡರು ಎನ್ನುತ್ತಾರೆ. ಅರೆಭಾಷಿಕರದ್ದು ವಿಭಿನ್ನ ಸಂಸ್ಕೃತಿಯಾಗಿದೆ ಎಂದರು.
ಅರೆಭಾಷಿಕರಾಗಿದ್ದ ಕುರುಂಜಿ ವೆಂಕಟರಮಣ ಗೌಡರು ನನಗೆ ಪರಿಚಿತರು. ಕರ್ನಾಟಕದಲ್ಲಿ ಸುಮಾರು 230 ಸಣ್ಣ ಭಾಷೆಗಳಿವೆ. ಇವೆಲ್ಲವೂ ಕನ್ನಡದಿಂದಲೇ ಹುಟ್ಟಿದ್ದು, ಅರೆಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಅಕಾಡೆಮಿ ಮಾಡಲಿ ಎಂದು ಆಶಿಸುತ್ತೇನೆ ಎಂದರು.
ಭಾಗಮಂಡಲದಲ್ಲಿ ನಾಡಗೌಡ ಸಮುದಾಯಕ್ಕೆ ಒಂದು ಕೋಟಿ ರೂ.ಗಳನ್ನು ಹಿಂದೆ ಒದಗಿಸಲಾಗಿತ್ತು. ಪ್ರಸ್ತುತ ಇರುವ 50 ಲಕ್ಷ ರೂ.ಬೇಡಿಕೆಯನ್ನು ಸಹ ಈಡೇರಿಸಲಾಗುವುದು. ಇತರೆ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಒದಗಿಸಲಾಗುವುದು. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ಕೊಡಬೇಕೆನ್ನುವ ಪ್ರಸ್ತಾವನೆ ಇದ್ದು, ಇದನ್ನು ಈಡೇರಿಸಲಾಗುವುದು ಎಂದರು.
ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿಗೆ ಭಾಜನರಾದ ಕೆ.ಆರ್.ಗಂಗಾಧಾರ, ಯು. ಪಿ.ಶಿವಾನಂದ ಹಾಗೂ ಡಿ.ಎಸ್.ಆನಂದ ಅವರಿಗೆ ಸರ್ಕಾರದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
