ಆಲಮಟ್ಟಿ: ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಉತ್ತರ ಕರ್ನಾಟಕ ಜೀವನದಿ ಕೃಷ್ಣಾಗೆ ಸೆ. 6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.
ಆಗಸ್ಟ್ ಎರಡನೆಯ ವಾರದವರೆಗೆ ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ವ್ಯಾಪಕ ಮಳೆಯಾಗಿ ಕೃಷ್ಣಾ ನದಿಯ ಮುಖ್ಯ ಹರಿವು ಹಾಗೂ ಅದರ ಉಪನದಿಗಳಲ್ಲಿ ಅಪಾರ ಪ್ರಮಾಣದ ನೀರು ಬಂದಿದೆ. ಪ್ರವಾಹ ಪರಿಸ್ಥಿತಿ ಉಂಟಾಗಿ ಜನ ಜಾನುವಾರುಗಳಿಗೆ ಜೀವ ಹಾನಿಯಾಗದಿರಲಿ ಎನ್ನುವ ಉದ್ದೇಶದಿಂದ ಕರ್ನಾಟಕ ಹಾಗೂ ಮಹಾರಾಷ್ಟ್ರ ಸರ್ಕಾರಗಳು ಮಾತನಾಡಿ ಪ್ರವಾಹ ಸಮಯದಲ್ಲಿ ಆಲಮಟ್ಟಿ ಜಲಾಶಯದಲ್ಲಿ 519.60 ಮೀಟರ್ ಗೆ ಬದಲಾಗಿ 517 ಮೀಟರ್ ವರೆಗೆ ಮಾತ್ರ ನೀರು ಸಂಗ್ರಹಿಸಲು ಪರಸ್ಪರ ಸಹಮತಿ ಸೂಚಿಸಿವೆ.
ಕೃಷ್ಣಾ ನದಿಗೆ ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನು ಸಾಮಾನ್ಯವಾಗಿ ಆಗಸ್ಟ್ ಕೊನೆ ಇಲ್ಲವೇ ಸೆಪ್ಟೆಂಬರ್ ಮೊದಲ ವಾರದಲ್ಲಿ ನೆರವೇರಿಸಲಾಗುತ್ತದೆ. ಸೆಪ್ಟೆಂಬರ್ 6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ ಎಂದು ಕೆಬಿಜೆಎನ್ಎಲ್ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.