ಬೆಂಗಳೂರು: ಸಣ್ಣ ವ್ಯಾಪಾರಿಗಳಿಗೆ ಜಿಎಸ್ ಟಿ ನೋಟೀಸ್ ಜಾರಿ ಮಾಡುವ ಮೂಲಕ ಬಿಜೆಪಿಯವರು ತಾವು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಕೇಂದ್ರ ಬಿಜೆಪಿ ಸರ್ಕಾರ 2019ರಲ್ಲೇ ವಾರ್ಷಿಕ 40 ಲಕ್ಷಕ್ಕೂ ವಹಿವಾಟು ಮಿತಿ ನಿಗದಿಗೊಳಿಸಿ ಎಲ್ಲಾ ರಾಜ್ಯ ಸರ್ಕಾರಗಳಿಗೂ ಇದನ್ನು ಪಾಲಿಸುವಂತೆ ಆದೇಶ ನೀಡಿದೆ. ಬಡವರಿಗೆ ಕಿರುಕುಳ ನೀಡುವುದನ್ನು ಬಿಜೆಪಿ ಸರ್ಕಾರ ಹಿಂಪಡೆಯಬೇಕು. ತರಕಾರಿ, ಹಣ್ಣು, ಎಳನೀರು, ಹೂವಿನ ವ್ಯಾಪಾರಿ ಸೇರಿದಂತೆ ಸಣ್ಣಪುಟ್ಟ ವ್ಯಾಪಾರ ಮಾಡುವ ಲಕ್ಷಾಂತರ ಮಂದಿ ಇದ್ದಾರೆ. ಈಗಾಗಲೇ 14 ಸಾವಿರ ವ್ಯಾಪಾರಿಗಳಿಗೆ ನೋಟೀಸ್ ನೀಡಲಾಗಿದೆ. ಈ ಹಿಂದೆಯೇ ರಾಹುಲ್ ಗಾಂಧಿ ಅವರು ಜಿಎಸ್ ಟಿ ವಿಚಾರವಾಗಿ ವಿರೋಧ ವ್ಯಕ್ತಪಡಿಸಿದ್ದರು. ಈ ವಿಚಾರದಲ್ಲಿ ಜನರಿಗೆ ಹೇಗೆ ನೆರವಾಗಬಹುದು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಅಗತ್ಯ ಮಾರ್ಗದರ್ಶನ ನೀಡಲಿದ್ದಾರೆ ಎಂದರು.
ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇವೆ. ನಮ್ಮ ಜನರಿಗೆ ನ್ಯಾಯ ಒದಗಿಸಿಕೊಡಬೇಕು. ಅತಿ ಹೆಚ್ಚು ಜಿಎಸ್ ಟಿ ತೆರಿಗೆ ಕಟ್ಟುತ್ತಿರುವ ರಾಜ್ಯ ನಮ್ಮದು. ನಮ್ಮ ಬಡ ಹಾಗೂ ಮಧ್ಯಮ ವ್ಯಾಪಾರಿಗಳಿಗೆ ಇದರಿಂದ ತೊಂದರೆ ಆಗುತ್ತಿದೆ ಎಂದು ತಿಳಿಸಿದರು.
ಕೇಂದ್ರ ಜಿಎಸ್ ಟಿ ಕೌನ್ಸಿಲ್ ಯಾವ ನಿಯಮ ರೂಪಿಸುತ್ತಾರೋ ಅದರಂತೆ ಅಧಿಕಾರಿಗಳು ನೋಟೀಸ್ ನೀಡಿದ್ದಾರೆ. ಕೇಂದ್ರದ ಸಮಿತಿಯ ಒತ್ತಡದ ಮೇರೆಗೆ ಈ ನೋಟೀಸ್ ನೀಡಲಾಗಿದೆ ಎಂದರು.