ಬಳ್ಳಾರಿ: ಜಿಲ್ಲೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ, ಮಾರಾಟ, ಸಂಗ್ರಹಣೆ, ವಿತರಣೆ ಹಾಗೂ ಬಳಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ರಸ್ತೆಗಳಲ್ಲಿ ಮತ್ತು ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸದ ರಾಶಿಗಳು, ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳು ಪರಿಸರ ಹಾಗೂ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಮುಖ್ಯಮಂತ್ರಿಗಳು ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ ಎಂದು ಜಿಪಂ ಸಿಇಒ ಅವರು ತಿಳಿಸಿದ್ದಾರೆ.
ಪರಿಸರ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 5 ರಡಿ ಹಾಗೂ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮಗಳು 2016, 2021 ರ ತಿದ್ದುಪಡಿ ಅನ್ವಯ ಕ್ಯಾರಿ ಬ್ಯಾಗ್ ಇತ್ಯಾದಿಗಳಲ್ಲಿ 120 ಮೈಕ್ರಾನ್ ಗಿಂತ ಕಡಿಮೆ ಗಾತ್ರದ ಎಲ್ಲಾ ಕೆಲವು ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ, ಮಾರಾಟ, ಸಂಗ್ರಹಣೆ, ವಿತರಣೆ ಹಾಗೂ ಬಳಕೆ ನಿಷೇಧಿಸಲಾಗಿದೆ.
ಹಾಗಾಗಿ ಸ್ಥಳೀಯ ಸಂಸ್ಥೆಗಳ ತಾಲ್ಲೂಕು, ಗ್ರಾಮ ಪಂಚಾಯತಿಗಳ ಮೂಲಕ ರಸ್ತೆ ಮತ್ತು ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸ ವಿಲೇವಾರಿ ತಡೆಗಟ್ಟುವುದು ಹಾಗೂ ಉಲ್ಲಂಘಿಸುವವರಿಗೆ ದಂಡ ವಿಧಿಸುವ ಕಾರ್ಯಾಚರಣೆ ತ್ವರಿತವಾಗಿ ಸಂಬAಧಿಸಿದ ಅಧಿಕಾರಿಗಳು ನಡೆಸಬೇಕು.
ಆಯಾ ಗ್ರಾಮ ಪಂಚಾಯತಿಯ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು, ಏಕ ಬಳಕೆಯ ಪ್ಲಾಸ್ಟಿಕ್ ತಯಾರಕರು ಹಾಗೂ ಮಾರಾಟಗಾರರ ಮೇಲ್ವಿಚಾರಣೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
ತಾಲ್ಲೂಕು ಪಂಚಾಯತಿ, ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಕಚೇರಿಗಳು ಮತ್ತು ಘಟಕಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ತಕ್ಷಣದಿಂದಲೇ ನಿಷೇಧಿಸಲಾಗಿದೆ ಎಂದು ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.