ಬೆಂಗಳೂರು: ಕಟ್ಟಡ ನಕ್ಷೆ ಪಡೆಯದ, ಸ್ವಾಧೀನ ಪ್ರಮಾಣ ಪತ್ರ ಇಲ್ಲದ ಕಟ್ಟಡಗಳಿಗೆ ನೀರು, ವಿದ್ಯುತ್ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಈ ಆದೇಶದಿಂದ ಜನರಿಗೆ ಎದುರಾಗಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಕಾನೂನಾತ್ಮಕವಾಗಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ, ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಇಡೀ ದೇಶಕ್ಕೆ ಅನ್ವಯವಾಗುತ್ತದೆ. ಸದ್ಯ ರಾಜ್ಯದಲ್ಲಿ 2.50 ಲಕ್ಷ ಜನರು ಹಳ್ಳಿಗಳು ಮತ್ತು ನಗರ ಪ್ರದೇಶಗಳಲ್ಲಿ ಕಟ್ಟಡ ನಕ್ಷೆ ಪಡೆಯದೇ ಮನೆ ಕಟ್ಟಿಕೊಂಡಿರುವ ಮಾಹಿತಿ ಇದೆ. ಅವರು ನೀರು ಮತ್ತು ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಹಾಕಿದ್ದಾರೆ. ಅವರಿಗೆಲ್ಲ ಇದೀಗ ವಿದ್ಯುತ್ ಮತ್ತು ನೀರಿನ ಸಂಪರ್ಕ ನೀಡಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್ ಆದೇಶ ವಿಚಾರದಲ್ಲಿ ಸಾರ್ವಜನಿಕರಿಗೆ ಹೇಗೆ ನೆರವಾಗಬೇಕು ಎಂಬುದರ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಕೇಳಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಮುಂದೆ ಕಟ್ಟಡ ನಕ್ಷೆ ಇಲ್ಲದೆ ಮನೆ ನಿರ್ಮಿಸಬೇಡಿ. ಸುಪ್ರೀಂ ಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಸಾರ್ವಜನಿಕರು ಆ ಸಾಹಸಕ್ಕೆ ಕೈಹಾಕಬಾರದು. ಈ ವಿಚಾರದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿದ್ದರೆ ಸಕ್ರಮ ಮಾಡುವುದು ಕಷ್ಟವಾಗುತ್ತದೆ ಎಂದು ಹೇಳಿದ್ದಾರೆ.