ನವದೆಹಲಿ: ಪಂಚಾಯಿತಿ ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ವಿರುದ್ಧ ಬಾಕಿ ಇರುವ ಪ್ರಕರಣಗಳನ್ನು ಘೋಷಣೆ ಮಾಡುವುದು ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಕುರಿತಾಗಿ ಹಿಮಾಚಲ ಪ್ರದೇಶ ಹೈಕೋರ್ಟ್ ನೀಡಿದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.
ಮಂಡಿ ಜಿಲ್ಲೆಯ ಪಂಗ್ನಾ ಗ್ರಾಮ ಪಂಚಾಯತಿಯ ಪ್ರಧಾನ್ ಆಗಿದ್ದ ಬಸಂತಲಾಲ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಕೋಟೀಶ್ವರ ಸಿಂಗ್ ಅವರಿದ್ದ ನ್ಯಾಯಪೀಠ ವಜಾಗೊಳಿಸಿದೆ.
2024ರ ಅಕ್ಟೋಬರ್ 16ರಂದು ತೀರ್ಪು ನೀಡಿದ್ದ ಹಿಮಾಚಲ ಪ್ರದೇಶ ಹೈಕೋರ್ಟ್ ತಮ್ಮ ಮೇಲಿರುವ ಕ್ರಿಮಿನಲ್ ಪ್ರಕರಣಗಳನ್ನು ಚುನಾವಣೆಯಲ್ಲಿ ಸ್ಪರ್ಧಿಸುವವರು ಘೋಷಣೆ ಮಾಡದಿರುವುದು ಅಕ್ರಮ ಎಂದು ಹಿಮಾಚಲ ಪ್ರದೇಶ ಪಂಚಾಯತ್ ರಾಜ್ ಕಾಯ್ದೆ 1994 ರಲ್ಲಿ ಹೇಳಿದೆ. ಇಂತಹ ಕಾಯ್ದೆ ಉಲ್ಲಂಘಿಸಿದವರು ಉಮೇದುವಾರಿಕೆ ಅನೂರ್ಜಿತಗೊಳಿಸಲು ಪೂರಕ ಆಧಾರವಾಗಿದೆ ಎಂದು ತಿಳಿಸಿತ್ತು.
ಹೈಕೋರ್ಟ್ ಆದೇಶದ ವಿರುದ್ಧ ಅರ್ಜಿದಾರರು ಸಲ್ಲಿಸಿದ ಮೇಲ್ಮನವಿಯಲ್ಲಿ ಯಾವುದೇ ಪೂರಕ ಮಾಹಿತಿ ನೀಡಲು ವಿಫಲರಾಗಿದ್ದಾರೆ. ಹೀಗಾಗಿ ರಾಜ್ಯ ಚುನಾವಣಾ ಆಯೋಗ ರಚಿಸಿದ ಮಾರ್ಗಸೂಚಿ ಸರಿಯಾಗಿದ್ದು, ಅದನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ವಿರುದ್ಧ ಇರುವ ಕ್ರಿಮಿನಲ್ ಪ್ರಕರಣಗಳಲ್ಲೂ ಕಡ್ಡಾಯವಾಗಿ ಘೋಷಿಸಬೇಕು ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ಕ್ರಿಮಿನಲ್ ಪ್ರಕರಣ ಘೋಷಣೆ ಮಾಡಿಕೊಳ್ಳದ ಕಾರಣ 6 ವರ್ಷ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅನರ್ಹಗೊಳಿಸಲಾಗಿದೆ ಎಂದು ಆರೋಪಿಸಿ ಅರ್ಜಿದಾರರು ದೂರಿದ್ದರು. ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ಖುಲಾಸೆಯಾಗಿದ್ದರೂ ಅನರ್ಹತೆ ಮುಂದುವರೆದಿತ್ತು.