ಬೆಂಗಳೂರು: ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿರುವ ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎನ್ನುವ ಪ್ರಕರಣದ ಎಸ್ಐಟಿ ತನಿಖೆ ಪ್ರಗತಿ ಬಗ್ಗೆ ಇಂದು ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಉತ್ತರ ನೀಡಲಿದ್ದಾರೆ.
ಭಾನುವಾರ ಬಿಜೆಪಿ ನಾಯಕರು ಧರ್ಮಸ್ಥಳ ಚಲೋ ಹಮ್ಮಿಕೊಂಡಿದ್ದು ಮಂಜುನಾಥಸ್ವಾಮಿ ದರ್ಶನ ಮಾಡಿ ವೀರೇಂದ್ರ ಹೆಗಡೆಯವರೊಂದಿಗೆ ಚರ್ಚೆ ನಡೆಸಿದ್ದಾರೆ. ಇನ್ನು ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ ನಡೆದಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದು, ಆಡಳಿತ ಮತ್ತು ವಿಪಕ್ಷಗಳ ನಡುವೆ ರಾಜಕೀಯ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದೆ. ಇವುಗಳ ನಡುವೆ ಎಸ್ಐಟಿ ತನಿಖೆ ಮುಂದುವರೆಸಿದ್ದು ಇಂದು ಸ್ಥಳದಲ್ಲಿ ಮಹಜರು ನಡೆಸುವ ಸಾಧ್ಯತೆ ಇದೆ.
ಇಂದು ಸದನದಲ್ಲಿ ಗೃಹ ಸಚಿವ ಪರಮೇಶ್ವರ್ ಎಸ್ಐಟಿ ತನಿಖೆಯ ಭವಿಷ್ಯದ ಬಗ್ಗೆ ಏನು ಹೇಳುತ್ತಾರೆ? ಸರ್ಕಾರದ ನಿಲುವು ಪ್ರಕಟಿಸುತ್ತಾರೆಯೇ ಎನ್ನುವ ಬಗ್ಗೆ ಕುತೂಹಲ ಮೂಡಿಸಿದೆ. ಅನಾಮಧೇಯ ನೀಡಿದ ದೂರಿನ ಮೇಲೆ ಎಸ್ಐಟಿ ರಚನೆ ಮಾಡಿದ್ದು, 15 ದಿನಗಳಿಂದ ಧರ್ಮಸ್ಥಳದಲ್ಲಿ ಗುಂಡಿ ತೋಡುತ್ತಿದ್ದರೂ ಯಾವುದೇ ಸುಳಿವು ದೊರೆತಿಲ್ಲ ಎಂದು ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಧರ್ಮಸ್ಥಳ ವಿರುದ್ಧ ಷಡ್ಯಂತ್ರ ನಡೆಸಿದವರ ಹೆಸರು ಬಹಿರಂಗಪಡಿಸಬೇಕು. ಮುಸುಕುಧಾರಿಯನ್ನು ಬಂಧಿಸಿ ಎಸ್ಐಟಿ ತನಿಖಾ ವರದಿಯನ್ನು ಸದನದಲ್ಲಿ ಮಂಡಿಸಬೇಕು ಎಂದು ಬಿಜೆಪಿ ಪಟ್ಟು ಹಿಡಿಯುವ ಸಾಧ್ಯತೆ ಇದೆ.
ಷಡ್ಯಂತ್ರ ನಡೆದಿರುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರೇ ಒಪ್ಪಿಕೊಂಡಿದ್ದಾರೆ. ಇಂದು ಗೃಹ ಸಚಿವ ಪರಮೇಶ್ವರ ಧರ್ಮಸ್ಥಳ ಪ್ರಕರಣ ಬಗ್ಗೆ ಉತ್ತರ ನೀಡಲು ಮುಂದಾಗಿದ್ದಾರೆ. ಈ ಪ್ರಕರಣದಲ್ಲಿ ಯಾರೂ ರಾಜಕೀಯ ಮಾಡಬಾರದು. ಇದು ಕಾನೂನಾತ್ಮಕ ಕೇಸ್ ಆಗಿದ್ದು, ಪೊಲೀಸರು ತನಿಖೆ ನಡೆಸುತ್ತಾರೆ. ತಪ್ಪು ಇದ್ದರೆ ಕೇಸ್ ಮುಂದುವರೆಸುತ್ತಾರೆ. ಇದು ಅಷ್ಟಕ್ಕೆ ಸೀಮಿತವಾಗಿರಬೇಕು. ವಿನಃ ರಾಜಕೀಯ ಬೇಡ ಎಂದು ಪರಮೇಶ್ವರ್ ಹೇಳಿದ್ದಾರೆ.