ಬೆಂಗಳೂರು : ರಾಜ್ಯದ ಶಾಲಾ ಶಿಕ್ಷಕರು, ಮುಖ್ಯೋಪಾಧ್ಯಾಯರುಗಳನ್ನು ಅನ್ಯ ಕಾರ್ಯಗಳಿಗೆ ಕಳುಹಿಸದಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಏನಿದೆ ಆದೇಶದಲ್ಲಿ..?
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸರ್ಕಾರಿ ಶಾಲೆಗಳಲ್ಲಿ ಶಾಲೆಯ ಸಮಯದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲೆಯಲ್ಲಿಯೇ ಹಾಜರಿದ್ದು, ಶಿಕ್ಷಣದ ಹಕ್ಕು ಕಾಯಿದೆಯ ಅಡಿಯಲ್ಲಿ ಪ್ರತಿದಿನ ಶಾಲೆಯ ಹಂತದಲ್ಲಿ ಭೋಧನೆ ಮತ್ತು ಕಲಿಕೆ ನಡೆಸಲು ಅನುವಾಗಬೇಕು. ಸರ್ಕಾರಿ ಶಾಲೆಗಳಲ್ಲಿ ಕಲಿಕೆ ಫಲಿತಾಂಶಗಳನ್ನು ಸುಧಾರಿಸಲು ಮತ್ತು ಉತ್ತಮ ಬೋಧನೆ ನೀಡಲು ಶಿಕ್ಷಕರೂ ಹಾಗೂ ಶಾಲಾ ಮುಖ್ಯೋಪಾಧ್ಯಾಯರೂ ಸಂಪೂರ್ಣವಾಗಿ ಶಾಲೆಯಲ್ಲಿ ಹಾಜರಿರುವುದು ಅತ್ಯಂತ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಎಲ್ಲಾ ಜಿಲ್ಲಾ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಯಟ್ ಪ್ರಾಂಶುಪಾಲರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ರಾಜ್ಯ ಹಾಗೂ ಜಿಲ್ಲೆಯಲ್ಲಿ ಇರುವ ಎಲ್ಲಾ ಅಧಿಕಾರಿಗಳು/ಸಿಬ್ಬಂದಿಗಳು ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ನಿರ್ದೇಶಿಸಲಾಗಿದೆ.
* ಯಾವುದೇ ಶಿಕ್ಷಕರನ್ನು/ಶಾಲಾ ಮುಖ್ಯೋಪಾಧ್ಯಾಯರನ್ನು ಯಾವುದೇ ತರಬೇತಿ ಕಾರ್ಯಕ್ರಮಗಳಿಗೆ, ಕಾರ್ಯಾಗಾರಗಳಿಗೆ, ಸಭೆಗಳಿಗೆ, ಇತರೆ ಚಟುವಟಿಕೆಗಳಿಗೆ ಶಾಲಾ ದಿನಗಳಲ್ಲಿ, ಶಾಲಾ ಸಮಯದಲ್ಲಿ ನಿಯೋಜನೆ/ಓ.ಓ.ಡಿ, ಮೌಖಿಕ ಅಥವಾ ಲಿಖಿತ ಆದೇಶಗಳ ಮೂಲಕ ಕಳುಹಿಸಬಾರದು. ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಹ ಇಂತಹ ನಿರ್ದೇಶನಗಳನ್ನು ನೀಡಬಾರದು.
* ಶಾಲಾ ಸಮಯದಲ್ಲಿ ಶಾಲಾ ಶಿಕ್ಷಕರು ಮತ್ತು ಶಾಲಾ ಮುಖ್ಯೋಪಾಧ್ಯಾಯರ ಯಾವುದೇ ಸಭೆಗಳನ್ನು ಕರೆಯಬಾರದು ಅಥವಾ ವಿಡಿಯೋ ಕಾನ್ಸರೆನ್ಸ್ (video conference) ಮಾಡಬಾರದು. ಶಾಲೆಗಳನ್ನು ಭೇಟಿ ನೀಡುವ ಯಾವುದೇ ಅಧಿಕಾರಿಗಳು ಶಾಲೆಯ ನಡೆದುಕೊಳ್ಳತಕ್ಕದ್ದು.
* ಯಾವುದೇ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಅವರ ಶಾಲೆಯ ಹೊರಗಡೆ ವಿವಿಧ ಕಾರ್ಯಕ್ರಮಗಳ ಪ್ರೇಕ್ಷಕರಾಗಿ ಭಾಗವಹಿಸಲು ಅಥವಾ ಕರೆದುಕೊಂಡು ಹೋಗಲು ನಿರ್ದೇಶಿಸಬಾರದು.
* ಶಾಲಾ ದಿನಗಳಲ್ಲಿ ಯಾವುದೇ ಬಾಹ್ಯ ಪರೀಕ್ಷೆಗಳನ್ನು (ಉದಾ: ಕರ್ನಾಟಕ ಲೋಕಸೇವಾ ಆಯೋಗ (KPSC) ಅಥವಾ ಇತರ ರಾಜ್ಯ/ಕೇಂದ್ರ ಸರ್ಕಾರ/ಖಾಸಗಿ ಸಂಸ್ಥೆಗಳು ನಡೆಸುವ ಪರೀಕ್ಷೆಗಳು) ಶಾಲೆಯ ಆವರಣದಲ್ಲಿ ನಡೆಸಬಾರದು. ಈ ನಿಬಂಧನೆಯನ್ನು ಉಲ್ಲಂಘಿಸಿದ ಜಿಲ್ಲಾ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಯಟ್ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು. ಇಂತಹ ಪರೀಕ್ಷೆಗಳನ್ನು ನಡೆಸಲು ಅವಕಾಶ ನೀಡಬೇಕಾದ್ದಲ್ಲಿ, ಅದು ಸಾರ್ವಜನಿಕ ರಜೆ ಅಥವಾ ಬೇಸಿಗೆ ರಜೆಯ ಸಮಯದಲ್ಲಿ ಮಾತ್ರ ನಿಯಮಗಳಂತೆ ನೀಡುವುದು.
* ಜಿಲ್ಲಾ ಉಪನಿರ್ದೇಶಕರು, ಶಿಕ್ಷಣಾಧಿಕಾರಿಗಳು. ಡಯಟ್ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯರ ಇಲಾಖೆಯ ಯಾವುದೇ ಮಟ್ಟದ ಅಧಿಕಾರಿಗಳು ಖಾಸಗಿ ಸಂಸ್ಥೆಗಳ ಅಥವಾ ಯಾವುದೇ ಜ್ಞಾನ ಪಾಲುದಾರರು ಸಾಫ್ಟ್ವೇರ್ಗಳಲ್ಲಿ ಡೇಟಾ ಎಂಟ್ರಿ ಮಾಡುವಂತೆ ಶಿಕ್ಷಕರು ಅಥವಾ ಶಾಲಾ ಮುಖ್ಯೋಪಾಧ್ಯಾಯರಿಗೆ ಮೌಖಿಕ ಅಥವಾ ಲಿಖಿತ ಆದೇಶ ನೀಡಬಾರದು. ಇಂತಹ ಆದೇಶ ನೀಡುವ ಯಾವುದೇ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

