ಯಾದಗಿರಿ: ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಭಾಗಿಯಾದ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಶಿಕ್ಷಕರೊಬ್ಬರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ಸುರಪುರ ತಾಲೂಕಿನ ತಿಂಥಿಣಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿಂದಿನ ಸಹ ಶಿಕ್ಷಕ ತಿಪ್ಪಣ್ಣ ಅವರ ವಿರುದ್ಧದ ವರದಕ್ಷಿಣೆ ಕಿರುಕುಳ ಆರೋಪ ದೃಢಪಟ್ಟಿದ್ದು, ನ್ಯಾಯಾಲಯದಲ್ಲಿ ದೋಷಿ ಎಂದು ಸಾಬೀತಾಗಿದೆ.
ಈ ಹಿನ್ನೆಲೆಯಲ್ಲಿ ಅವರನ್ನು ಸೇವೆಯಿಂದ ವಜಾಗೊಳಿಸಿ ಡಿಡಿಪಿಐ ಚನ್ನಬಸಪ್ಪ ಮುಧೋಳ ಆದೇಶಿಸಿದ್ದಾರೆ. ತಿಪ್ಪಣ್ಣ ಅವರನ್ನು ಸೇವೆಯಲ್ಲಿ ಮುಂದುವರೆಸಿದರೆ ಸಮಾಜದ ಮೇಲೆ, ಸಹವರ್ತಿ ಅಧಿಕಾರಿ, ಸಿಬ್ಬಂದಿ ಮೇಲೆ ಕೆಟ್ಟ ಪ್ರಭಾವ ಬೀರುತ್ತದೆ. ಹೀಗಾಗಿ ಸೇವೆಯಿಂದ ವಜಾಗೊಳಿಸುವುದು ಸೂಕ್ತವೆಂದು ತೀರ್ಮಾನಿಸಿ ಆದೇಶ ಹೊರಡಿಸಲಾಗಿದೆ ಎಂದು ಹೇಳಲಾಗಿದೆ.