ಬೆಂಗಳೂರು: ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ಘೋಷವಾಕ್ಯ ಬದಲಾವಣೆ ಮಾಡಲು ಯಾವುದೇ ಆದೇಶ ಹೊರಡಿಸಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ.
ಜ್ಞಾನ ದೇಗುಲವಿದು ಎಂಬ ಘೋಷವಾಕ್ಯಕ್ಕೆ ಸಂಬಂಧಿಸಿದಂತೆ ಸರ್ಕಾರದ ವತಿಯಿಂದ ಈಗ ಪ್ರಸ್ತುತ ಇರುವ ಘೋಷವಾಕ್ಯವನ್ನು ತೆಗೆದುಹಾಕುವ ಯಾವುದೇ ಆದೇಶವನ್ನು ಹೊರಡಿಸಲಾಗಿಲ್ಲ ಎಂದು ತಿಳಿಸಿದ್ದಾರೆ.
ಉತ್ತಮ ಆಲೋಚನೆಯನ್ನು ಹೊಂದಿದ ಈ ಸಾಲನ್ನು ಕೆಲವರು ಶಾಲೆಗಳಲ್ಲೂ ಬಳಸಿರುತ್ತಾರೆ. ಅಂದಹಾಗೆ ಜ್ಞಾನ ದೇಗುಲವಿದು – ಧೈರ್ಯವಾಗಿ ಪ್ರಶ್ನಿಸಿ ಎಂದರೆ ಅದು ಕುವೆಂಪು ಅವರು ಹೇಳುವ ವಿಚಾರ ಕ್ರಾಂತಿಗೆ ಆಹ್ವಾನ ಪ್ರಬಂಧದ ಆಶಯವೇ ಆಗಿದ್ದು, ಕುವೆಂಪು ಅವರಿಗೆ ಅವಮಾನ ಎಸಗುವ ಯಾವುದೇ ಪ್ರಮಾದವು ಇಲ್ಲಿ ಜರುಗಿರುವುದಿಲ್ಲ ಎಂದು ತಿಳಿಸಿದ್ದಾರೆ.
ಶಿಕ್ಷಣದ ಉದ್ದೇಶವೇ ಮಕ್ಕಳಲ್ಲಿ ವೈಚಾರಿಕತೆಯ ಜೊತೆಗೆ, ಪ್ರಶ್ನಿಸುವ ಸಾಮರ್ಥ್ಯವನ್ನು ಬೆಳೆಸುವುದಾಗಿದೆ. ಐಸಾಕ್ ನ್ಯೂಟನ್, ಆಲ್ಬರ್ಟ್ ಐನ್ ಸ್ಟೀನ್ ನಿಂದ ಹಿಡಿದು ಬಹಳಷ್ಟು ವಿಜ್ಞಾನಿಗಳು ಇದನ್ನೇ ಪ್ರತಿಪಾದಿಸಿದ್ದು. ಇಂತಹ ಆಲೋಚನೆಗಳನ್ನು ನಾವು ಮುಕ್ತ ಮನಸ್ಸಿನಿಂದ ಸ್ವಾಗತಿಸಬೇಕು. ನನ್ನ ಪ್ರಕಾರ ಇದೊಂದು ವಿವಾದದ ಅಂಶವೇ ಅಲ್ಲ, ಸಂತೋಷದಿಂದ ಸ್ವಾಗತಿಸಬೇಕಾದ ಸಂಗತಿಗಳನ್ನು ಹಿಡಿದು, ವಿವಾದ ಮಾಡುವುದನ್ನು ನೋಡಿದರೆ, ನಿಜಕ್ಕೂ ನನಗೆ ಗೊಂದಲವಾಗುತ್ತದೆ ಎಂದು ತಿಳಿಸಿದ್ದಾರೆ.
https://twitter.com/CMahadevappa/status/1759562529452462344
https://twitter.com/CMahadevappa/status/1759563069569835027
https://twitter.com/CMahadevappa/status/1759563461473009787