ಬೆಂಗಳೂರು: ರಾಜ್ಯದಲ್ಲಿ ಭಾನುವಾರದಿಂದ ಒಂದು ವಾರ ಕರಾವಳಿ ಹೊರತುಪಡಿಸಿ ಉಳಿದೆಡೆ ಅತಿ ಸಾಧಾರಣ ಮಳೆ ಆಗಲಿದೆ. ಒಳನಾಡಿನಲ್ಲಿ ಬಹುತೇಕ ಕಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
ಶನಿವಾರ ಮಳೆ ಬಿಡುವು ನೀಡಿದ್ದು, ರೈತರಿಗೆ ಕೊಂಚ ನೆಮ್ಮದಿ ತಂದಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಇನ್ನೊಂದು ವಾರ ಇದೇ ಪರಿಸ್ಥಿತಿ ಇದ್ದರೆ ಬಿತ್ತನೆ ಚಟುವಟಿಕೆ ಬಿರುಸು ಪಡೆದುಕೊಳ್ಳಲಿದೆ. ಮುಂಗಾರು ಪೂರ್ವ ಮತ್ತು ಮುಂಗಾರು ಆರಂಭದಲ್ಲಿ ಅಬ್ಬರದ ಮಳೆಯಾಗಿದ್ದರಿಂದ ಭೂಮಿಯನ್ನು ಬಿತ್ತನೆಗೆ ಸಿದ್ಧಗೊಳಿಸುವುದು ಸೇರಿದಂತೆ ಬಿತ್ತನೆಗೆ ಭೂಮಿ ಸಿದ್ಧತೆ ಮಾಡಿಕೊಳ್ಳಲು ರೈತರಿಗೆ ಸಾಧ್ಯವಾಗಿರಲಿಲ್ಲ. ಹೀಗಾಗಿ ಮಳೆ ಬಿಡುವು ನೀಡಿರುವುದರಿಂದ ಬಿತ್ತನೆಗೆ ಭೂಮಿಯನ್ನು ಸಿದ್ಧ ಮಾಡಿಕೊಳ್ಳಲಾಗುತ್ತಿದೆ.
ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಜೂನ್ 1, 2 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 3, 4 ರಂದು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 1ರಿಂದ 7ರವರೆಗೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅತಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.