ಮೈಸೂರು: ರಾಜ್ಯದಲ್ಲಿ ಪಡಿತರ ಚೀಟಿದಾರರು ಇ- ಕೆವೈಸಿಯನ್ನು ಆದಷ್ಟು ಬೇಗನೆ ಮಾಡಿಸಬೇಕು ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮೈಸೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಒಂದು ತಿಂಗಳು ಕಾಲಾವಕಾಶ ನೀಡಬೇಕು. ಆಗಲೂ ಇ-ಕೆವೈಸಿ ಮಾಡಿಸದೆ ಇದ್ದರೆ ಅಂತಹ ಸದಸ್ಯರ ಪಡಿತರ ಕಾರ್ಡ್ ರದ್ದು ಪಡಿಸುವುದಾಗಿ ಎಚ್ಚರಿಕೆ ನೀಡಬೇಕು ಎಂದು ಹೇಳಿದ್ದಾರೆ.
ಅನಗತ್ಯವಾಗಿ ಕಾರ್ಡ್ ಗಳು ವಿತರಣೆಯಾದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಜಾಗೃತಿ ಸಮಿತಿ ರಚಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಆಹಾರ ಧಾನ್ಯಗಳು ಗೋದಾಮುಗಳಲ್ಲಿ ಹಾಳಾಗದಂತೆ ನೋಡಿಕೊಳ್ಳಿ. ಕನಿಷ್ಠ ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಸುವ ಆಹಾರಧಾನ್ಯಗಳನ್ನು ಸುರಕ್ಷಿತವಾಗಿ ಸಂರಕ್ಷಣೆ ಮಾಡಬೇಕು ಎಂದು ತಿಳಿಸಿದ್ದಾರೆ.