ಬೆಂಗಳೂರು: ಆತಂಕದಲ್ಲಿದ್ದ ಲಕ್ಷಾಂತರ ಜನರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. 30*40 ಸೈಟಲ್ಲಿರುವ ಮೂರು ಅಂತಸ್ತಿನ ಕಟ್ಟಡಗಳಿಗೆ ಒಸಿ ವಿನಾಯಿತಿ ನೀಡುವ ಬಗ್ಗೆ ಸರ್ಕಾರಕ್ಕೆ ನಗರಾಭಿವೃದ್ಧಿ ಇಲಾಖೆಯಿಂದ ಪ್ರಸ್ತಾಪನೆ ಸಲ್ಲಿಸಲಾಗಿದೆ.
ಕಟ್ಟಡ ನಿರ್ಮಾಣ ಪ್ರಮಾಣ ಪತ್ರ, ಸ್ವಾಧಿನಾನುಭವ ಪ್ರಮಾಣ ಪತ್ರ ಇಲ್ಲದ ಕಟ್ಟಡಗಳಿಗೆ ವಿದ್ಯುತ್, ನೀರಿನ ಸಂಪರ್ಕ ಕಲ್ಪಿಸದಂತೆ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ಲಕ್ಷಾಂತರ ಕಟ್ಟಡ ಮಾಲೀಕರು ತೊಂದರೆಗೆ ಸಿಲುಕಿದ್ದಾರೆ. ಅವರ ನೆರವಿಗೆ ನಗರಾಭಿವೃದ್ಧಿ ಇಲಾಖೆ ಮುಂದಾಗಿದೆ. 1,200 ಚದರಡಿ ನಿವೇಶನದಲ್ಲಿ ಮೂರು ಅಂತಸ್ತಿನ ಕಟ್ಟಡಗಳಿಗೆ ಒಸಿಯಿಂದ ವಿನಾಯಿತಿ ನೀಡುವ ಉದ್ದೇಶದಿಂದ ಮಾದರಿ ಕಟ್ಟಡ ಬೈಲಾ ತಿದ್ದುಪಡಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ನಗರಾಭಿವೃದ್ಧೀ ಇಲಾಖೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಿದೆ.
ಈ ತೀರ್ಮಾನದಿಂದ ವಿಶೇಷವಾಗಿ 30*40 ನಿವೇಶನದಲ್ಲಿ ನಿರ್ಮಾಣಗೊಂಡ ಕಟ್ಟಡ ಮಾಲೀಕರಿಗೆ ಅನುಕೂಲವಾಗುತ್ತದೆ. ಬೆಂಗಳೂರಿನಲ್ಲಿ ಜಲಮಂಡಳಿ ಸಾವಿರಾರು ಮನೆಗಳಿಗೆ ನೀರಿನ ಸಂಪರ್ಕ ನೀಡಿದೆ. ಆದರೆ ಒಸಿ ಪಡೆಯದ ಕಾರಣ ನೀರಿನ ಶುಲ್ಕದ ಜೊತೆಗೆ ದಂಡ ಕೂಡ ವಿಧಿಸಲಾಗುತ್ತಿದೆ.
ಈಗ ಪ್ರಮಾಣ ಪತ್ರ ಪಡೆಯಲು ವಿನಾಯಿತಿ ನೀಡಲಾಗುವುದು. ಇದಕ್ಕಾಗಿ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ -2024, ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ 1976, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಮಾದರಿ ಕಟ್ಟಡ ಬೈಲಾಗಳ ತಿದ್ದುಪಡಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಯಲ್ಲಿ ಒಸಿಗೆ ವಿನಾಯಿತಿ ನೀಡಲು ಸರ್ಕಾರ ಅಧಿಸೂಚನೆ ಹೊರಡಿಸಬಹುದು. ಬಿಬಿಎಂಪಿ ಕಾಯ್ದೆ, ಕರ್ನಾಟಕಪುರ ಸಭೆ ಕಾಯ್ದೆಯಲ್ಲಿ ಈ ಅವಕಾಶವಿಲ್ಲ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಉಪಮುಖ್ಯಮಂತ್ರಿ, ಕಾನೂನು, ನಗರಾಭಿವೃದ್ಧಿ, ಕಂದಾಯ, ಇಂಧನ, ಪೌರಾಡಳಿತ, ಕೈಗಾರಿಕೆ ಸಚಿವರೊಂದಿಗೆ ನಡೆಸಲಾದ ಸಭೆಯಲ್ಲಿ ಎಲ್ಲಾ ಕಾಯ್ದೆಗಳಲ್ಲೂ ಸಮಾನಾಂತರ ಅವಕಾಶ ಇರಬೇಕೆಂಬ ಅಭಿಪ್ರಾಯವಾಗಿತ್ತು. ಒಸಿ ಗೆ ವಿನಾಯಿತಿ ನೀಡಲು ನಿಯಮ ರಚಿಸಿ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎನ್ನಲಾಗಿದೆ.