ದಾವಣಗೆರೆ: ಕೈಯಲ್ಲಿ ಕಲ್ಲು ಹಿಡಿದುಕೊಂಡು ಜನರಲ್ಲಿ ಭೀತಿ ಸೃಷ್ಟಿಸಿ ಬಲವಂತವಾಗಿ ದಾವಣಗೆರೆ ಬಂದ್ ನಡೆಸಿದ ಆರೋಪದಲ್ಲಿ ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್ ವಿರುದ್ಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭದ್ರಾ ಬಲದಂಡೆ ನಾಲೆಯನ್ನು ಸೀಳಿ ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಯ ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ವಿರೋಧಿಸಿ ಬಿಜೆಪಿ ರೈತ ಮೋರ್ಚಾ ಮತ್ತು ಜಿಲ್ಲಾ ರೈತ ಒಕ್ಕೂಟದಿಂದ ಶನಿವಾರ ದಾವಣಗೆರೆ ಬಂದ್ ಗೆ ಕರೆ ನೀಡಲಾಗಿತ್ತು.
ಈ ಸಂದರ್ಭದಲ್ಲಿ ಆಟೋ, ಬಸ್ ಚಾಲಕರು ಮತ್ತು ವ್ಯಾಪಾರಿಗಳನ್ನು ಲೋಕಿಕೆರೆ ನಾಗರಾಜ್ ಬೆದರಿಸಿದ್ದಾರೆ, ಉದ್ದೇಶಪೂರ್ವಕವಾಗಿ ಭೀತಿ ಸೃಷ್ಟಿಸಿದ ಆರೋಪದ ಮೇರೆಗೆ ಅವರ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿ ಎಫ್ಐಆರ್ ಹಾಕಲಾಗಿದೆ ಎಂದು ಎಸ್ಪಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.