ರಾಜ್ಯದ ಎಲ್ಲಾ ಶಾಲೆಗಳಲ್ಲೂ ಪರಿಸರ ಜಾಗೃತಿ ಕ್ಲಬ್ ರಚನೆ ಕಡ್ಡಾಯ

ಬೆಂಗಳೂರು: ಮಕ್ಕಳಲ್ಲಿ ಪರಿಸರ, ಹವಾಮಾನ ಬದಲಾವಣೆ ಕುರಿತಾಗಿ ಜಾಗೃತಿ ಮೂಡಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಶಾಲೆಯಲ್ಲೂ ಕಡ್ಡಾಯವಾಗಿ ಪರಿಸರ, ಹವಾಮಾನ ವೈಪರಿತ್ಯ ಜಾಗೃತಿ ಕ್ಲಬ್ ರಚಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಶ್ವ ಪರಿಸರ ದಿನದ ಅಂಗವಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಶಾಲಾ ಸಮಯದಲ್ಲೇ ಪರಿಸರ ಸಂರಕ್ಷಣೆ ಕುರಿತಾಗಿ ಅರಿವು ಮೂಡಿಸಬೇಕು. ಇದಕ್ಕಾಗಿ ಪ್ರತಿ ಶಾಲೆಯಲ್ಲಿಯೂ ಕನಿಷ್ಠ 25 ವಿದ್ಯಾರ್ಥಿಗಳನ್ನು ಒಳಗೊಂಡ ಜಾಗೃತಿ ಕ್ಲಬ್ ರಚಿಸಬೇಕು ಎಂದು ಆದೇಶಿಸಲಾಗಿದೆ. ಇದರೊಂದಿಗೆ ಒಂದೊಂದು ಶಾಲೆಯೂ ಮರ ಬೆಳೆಸಲು ಆಯಾ ಪ್ರದೇಶಗಳನ್ನು ದತ್ತು ಪಡೆಯಬೇಕು ಎಂದು ಹೇಳಿದ್ದಾರೆ.

ರಾಜ್ಯದ ಪ್ರತಿ ವಿದ್ಯಾರ್ಥಿಯೂ ಒಂದೊಂದು ಸಸಿಯನ್ನು ದತ್ತು ಪಡೆಯಬೇಕು ಎಂದು ತಿಳಿಸಲಾಗಿದೆ. ಈಗಾಗಲೇ 50 ಸಾವಿರಕ್ಕೂ ಹೆಚ್ಚು ಮಕ್ಕಳು ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯದ ವಾತಾವರಣವೇ ನಮ್ಮ ಆಸ್ತಿಯಾಗಿದ್ದು, ಅದನ್ನು ಉಳಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಡಿಸಿಎಂ ಹೇಳಿದ್ದಾರೆ.

ಪ್ರತಿಯೊಬ್ಬರೂ ಒಂದೊಂದು ಗಿಡವನ್ನು ಬೆಳೆಸಿ, ಅದನ್ನೇ ಭವಿಷ್ಯಕ್ಕೆ ಆಸ್ತಿಯಾಗಿ ನೀಡುವ ಮೂಲಕ ಜೀವನದಲ್ಲಿ ಸಾರ್ಥಕ್ಯವನ್ನು ಪಡೆಯಬಹುದು. ಬೆಂಗಳೂರು ನಗರಾಭಿವೃದ್ಧಿ ಸಚಿವನಾದ ಬಳಿಕ, ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಲೆಗಳಲ್ಲೂ ಪ್ರತಿಯೊಬ್ಬ ವಿದ್ಯಾರ್ಥಿಯೂ ಒಂದೊಂದು ಗಿಡವನ್ನು ನೆಟ್ಟು, ಪೋಷಿಸಬೇಕು ಎಂದಿದ್ದೆ. ಈ ರೀತಿಯಾಗಿ 50,000ಕ್ಕೂ ಅಧಿಕ ಗಿಡಗಳನ್ನು ಬೆಳೆಸಿದ್ದೇವೆ ಎಂದು ಹೇಳಿದ್ದಾರೆ.

ಜೂನ್ 6ರಂದು ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಲು ಹವಾಮಾನ ಕ್ರಿಯಾ ಕ್ಲಬ್‌ಗೆ ಚಾಲನೆ ನೀಡಿದ್ದೇವೆ.‌ ಮೇ‌ 15ರಂದು ಕಬಿನಿ ಭೇಟಿಯ ವೇಳೆ ಹೇರಳವಾದ ಅರಣ್ಯ ಸಂಪತ್ತನ್ನು ಕಣ್ತುಂಬಿಕೊಂಡಿದ್ದೇನೆ. ಈ ಸಂಪತ್ತನ್ನು ಎಲ್ಲರೂ ನೋಡಬೇಕು‌. ಅರಣ್ಯ ಇಲಾಖೆಯವರು ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ನಾವೆಲ್ಲರೂ ಸೇರಿ ಇನ್ನಷ್ಟು ಶಕ್ತಿ ನೀಡಬೇಕು ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read