ಮಹಾರಾಷ್ಟ್ರ ಸಿಎಂ, ಡಿಸಿಎಂಗಳ ಪ್ರಮಾಣವಚನ ಸಮಾರಂಭದಲ್ಲಿ ಚಿನ್ನದ ಸರ, ಫೋನ್ ಸೇರಿ 12 ಲಕ್ಷ ರೂ. ಮೌಲ್ಯದ ವಸ್ತು ಕಳವು

ಮುಂಬೈ: ಡಿಸೆಂಬರ್ 5 ರಂದು ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ನಡೆದ ಮಹಾಯುತಿ ಸರ್ಕಾರದ ಅದ್ಧೂರಿ ಪ್ರಮಾಣ ವಚನ ಸಮಾರಂಭದಲ್ಲಿ ಚಿನ್ನದ ಸರಗಳು, ಮೊಬೈಲ್ ಫೋನ್‌ಗಳು ಮತ್ತು ನಗದು ಸೇರಿದಂತೆ ಕನಿಷ್ಠ 12 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಕಳ್ಳತನವಾಗಿವೆ.

ದೇವೇಂದ್ರ ಫಡ್ನವಿಸ್ ಅವರು ಮುಖ್ಯಮಂತ್ರಿಯಾಗಿ, ಶಿವಸೇನೆಯ ಏಕನಾಥ್ ಶಿಂಧೆ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮಾರಂಭದಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ.

ಪ್ರಮುಖ ರಾಜಕೀಯ ವ್ಯಕ್ತಿಗಳು ಮತ್ತು ಉದ್ಯಮದ ಪ್ರಮುಖರು ಭಾಗವಹಿಸಿದ್ದ ಸಮಾರಂಭದ ಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ 4,000 ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳಿಂದ ಭದ್ರತೆ ಒದಗಿಸಲಾಗಿತ್ತು. ಮಹಾಯುತಿ ಮೈತ್ರಿಕೂಟದ 40,000 ಕ್ಕೂ ಹೆಚ್ಚು ಬೆಂಬಲಿಗರು ಭಾಗವಹಿಸಿದ್ದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು.

ಪೊಲೀಸರು ಪ್ರಕಾರ, ಎರಡನೇ ಗೇಟ್ ಮೂಲಕ ಸ್ಥಳದಿಂದ ಹೊರಹೋಗುತ್ತಿದ್ದಂತೆ ಕಳ್ಳತನ ನಡೆದಿದೆ. ಜನಸಂದಣಿಯನ್ನು ದುರ್ಬಳಕೆ ಮಾಡಿಕೊಂಡ ಕಳ್ಳರು ಚಿನ್ನದ ಸರ, ಮೊಬೈಲ್ ಫೋನ್, ವಾಲೆಟ್ ಸೇರಿದಂತೆ ಬೆಲೆ ಬಾಳುವ ವಸ್ತುಗಳನ್ನು ಕದ್ದೊಯ್ದಿದ್ದಾರೆ.

ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಮತ್ತು ಶಂಕಿತರನ್ನು ಹಿಡಿಯಲು ಪ್ರಯತ್ನಗಳು ನಡೆಯುತ್ತಿವೆ. ಆರೋಪಿಗಳ ಪತ್ತೆಗೆ ಪೊಲೀಸರು ಸದ್ಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಇನ್ನೂ ಯಾರ ಬಂಧನವೂ ಆಗಿಲ್ಲ ಎಂದು ಆಜಾದ್ ಮೈದಾನ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read