ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ಒಂದು ವರ್ಷಕ್ಕೆ ರೂ. 6000/-ಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ 3 ಕಂತುಗಳಲ್ಲಿ ನೀಡಲಾಗುತ್ತಿದೆ. ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರು ಬಾಕಿಯಿರುವ ಇ-ಕೆವೈಸಿ ಮಾಡಿಸಿ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿಕೊಂಡು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ರೈತರು ತಮ್ಮ ಆಧಾರ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನಲ್ಲಿ ನೋಂದಾಯಿಸಿರುವ ಮೊಬೈಲ್ ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಇ ಕೆವೈಸಿ ಮಾಡಿಸುವುದು. ಹಾಗೂ ಈಗಾಗಲೇ ಕೃಷಿ ಇಲಾಖೆಯಿಂದ ತಮ್ಮ ಗ್ರಾಮಗಳಿಗೆ ಗ್ರಾಮ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿರುವ PMKISAN e-KYC through Face Recognition App ಮೂಲಕ ಇ-ಕೆವೈಸಿ ಮಾಡಿಸುವಲ್ಲಿ ಗ್ರಾಮ ನೋಡಲ್ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ತಿಳಿಸಿರುತ್ತಾರೆ.