ಕೊಪ್ಪಳ: ಅನ್ನಭಾಗ್ಯ ಯೋಜನೆಯಡಿ ಪಡಿತರದಲ್ಲಿ ಆಹಾರ ಧಾನ್ಯದ ಕಿಟ್ ವಿತರಿಸುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ಕುಕನೂರು ಪಟ್ಟಣ ಪ್ರವಾಸಿ ಮಂದಿರದಲ್ಲಿ ನಡೆದ ಕುಕನೂರು, ಯಲಬುರ್ಗಾ ತಾಲೂಕಿನ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಪಡಿತರ ಧಾನ್ಯದಲ್ಲಿ 5 ಕೆಜಿ ಅಕ್ಕಿ ಜೊತೆಗೆ 5 ಕೆಜಿ ಪಡಿತರದ ಹಣ 150 ರೂಪಾಯಿಯನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತಿತ್ತು. ಹಣ ನೀಡುವ ಬದಲು ಪಡಿತರ ವಿತರಿಸಲಾಗುತ್ತದೆ ಎಂದು ಹೇಳಿದ್ದಾರೆ.
ಹಣ ನೀಡುವ ಬದಲು ತೊಗರಿ ಬೇಳೆ, ಕೊಬ್ಬರಿ ಎಣ್ಣೆ, ಸಕ್ಕರೆ, ಜೋಳ ಹೀಗೆ ಆಹಾರ ಧಾನ್ಯಗಳ ಕಿಟ್ ಮಾಡಿ ವಿತರಿಸುವ ಯೋಜನೆ ಇದೆ. ಇದನ್ನು ರಾಜ್ಯಮಟ್ಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.