ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಹಾಲಿ ಇರುವ ರಾಷ್ಟ್ರೀಯ ಪಿಂಚಣಿ ಯೋಜನೆ(ಎನ್ಪಿಎಸ್)ಗೆ ಬದಲಾಗಿ ಹಳೆಯ ಪಿಂಚಣಿ ಯೋಜನೆ(ಒಪಿಎಸ್) ಜಾರಿ ಮಾಡುವ ಸಾಧ್ಯತೆಗಳ ಬಗ್ಗೆ ಚರ್ಚೆಗೆ ಆಗಸ್ಟ್ 12ರಂದು ಸರ್ಕಾರ ಮಹತ್ವದ ಸಭೆ ಆಯೋಜಿಸಿದೆ.
ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾದ ಉಮಾ ಮಹಾದೇವನ್ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 12ರಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಸಭೆ ನಿಗದಿಪಡಿಸಲಾಗಿದೆ.
ಒಪಿಎಸ್ ಜಾರಿ ಸಂಬಂಧ ಸರ್ಕಾರದ ಕಾರ್ಯದರ್ಶಿ ರಮಣ್ ದೀಪ್ ಅವರ ನೇತೃತ್ವದ ಸಮಿತಿ ಈಗಾಗಲೇ ಒಪಿಎಸ್ ಜಾರಿ ಮಾಡಿರುವ ಹಿಮಾಚಲ ಪ್ರದೇಶ ರಾಜ್ಯಕ್ಕೆ ಭೇಟಿ ನೀಡಿ ಸಿದ್ಧಪಡಿಸಿದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಕಾರ್ಯದರ್ಶಿ ತುಳಸಿ ಮದ್ದಿನೇನಿ ಅವರು ಆಂಧ್ರಪ್ರದೇಶ ರಾಜ್ಯಕ್ಕೆ ಭೇಟಿ ನೀಡಿ ವರದಿ ಸಿದ್ದಪಡಿಸಿ ಸಲ್ಲಿಸಿದ್ದು, ಈ ಎರಡು ವರದಿಗಳ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಾಗುವುದು ಎಂದು ಹೇಳಲಾಗಿದೆ.
