ಬೆಂಗಳೂರು: ನಗರದಲ್ಲಿರುವ ಎಲ್ಲಾ ಆಸ್ತಿಗಳ ದಾಖಲೆಗಳನ್ನು ಸ್ಕ್ಯಾನ್ ಮಾಡಿಸುತ್ತಿದ್ದು, ಜನರ ಮನೆ ಬಾಗಿಲಿಗೆ ಖಾತೆ ದಾಖಲೆ ತಲುಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸೆಂಟ್ರಲ್ ಕಾಲೇಜು ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಮೃತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು ಈ ಭರವಸೆ ನೀಡಿದ್ದಾರೆ.
ನಗರದ ಹಲವು ಆಸ್ತಿಗಳು ಪೂರ್ವಜರ ಹೆಸರಿನಲ್ಲಿವೆ. ಕೆಲವರು ತಮ್ಮ ಹೆಸರಿಗೆ ಖಾತೆಗಳನ್ನು ಮಾಡಿಸಿಕೊಂಡಿಲ್ಲ. ಈ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರೊಂದಿಗೆ ಚರ್ಚೆ ನಡೆಸಿದ್ದು, ವ್ಯವಸ್ಥಿತ ರೂಪಕ್ಕೆ ತರಲು ಮುಂದಾಗಿದ್ದೇವೆ ಎಂದು ತಿಳಿಸಿದ್ದಾರೆ.
ಬೆಂಗಳೂರು ನಗರಾಭಿವೃದ್ಧಿ ಸಚಿವನಾಗಿ ನಾನು ಆಸ್ತಿಗಳ ದಾಖಲೆಗಳನ್ನು ಮಾಲೀಕರ ಮನೆ ಬಾಗಿಲಿಗೆ ತಲುಪಿಸಬೇಕು ಎಂದು ಪ್ರಯತ್ನಿಸುತ್ತಿದ್ದೇನೆ. ಈಗಾಗಲೇ ಶೇಕಡ 60ರಷ್ಟು ಆಸ್ತಿಗಳ ಪರಿಶೀಲನೆ ಮುಗಿದಿದೆ. ಜನರ ಮನೆ ಬಾಗಿಲಿಗೆ ಆಸ್ತಿ ದಾಖಲೆ ತಲುಪಿಸಲಾಗುವುದು ಎಂದು ವಿವರಿಸಿದ್ದಾರೆ.