ಬೆಂಗಳೂರು: ರಾಜ್ಯ ಪೊಲೀಸ್ ಹುದ್ದೆಗಳ ನೇಮಕಾತಿಗೆ ಪ್ರತ್ಯೇಕ ಶಾಶ್ವತ ವಯೋಮಿತಿ ನಿಯಮ ಪ್ರಕಟಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಲ್ಲಾ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಮಾಡಿ ಆದೇಶ ಹೊರಡಿಸಲಾಗಿದೆ. ಆದರೆ, ಒಂದು ಸಲಕ್ಕೆ ಮಾತ್ರ ಅನ್ವಯವಾಗುವಂತೆ 2027 ರವರೆಗೆ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಪೊಲೀಸ್ ಇಲಾಖೆಯಲ್ಲಿ ಶಾಶ್ವತವಾಗಿ ವಯೋಮಿತಿ ಸಡಿಲಿಕೆ ಮಾಡಲು ಮುಂದಾಗಿದ್ದೇವೆ ಎಂದು ತಿಳಿಸಿದ್ದಾರೆ.
ಇದಕ್ಕಾಗಿ ಸಿ ಅಂಡ್ ಆರ್ ನಿಯಮಗಳಿಗೆ ತಿದ್ದುಪಡಿ ಮಾಡಿ ಶಾಶ್ವತವಾಗಿ ಪೊಲೀಸ್ ಕಾನ್ಸ್ಟೇಬಲ್, ಪಿಎಸ್ಐ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ಮಾಡಲಾಗುವುದು. ಈ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಯಾವ ರಾಜ್ಯಗಳಲ್ಲಿ ಎಷ್ಟು ವಯೋಮಿತಿ ಇದೆ ಎನ್ನುವ ಮಾಹಿತಿ ಪಡೆಯಲಾಗಿದ್ದು, ಶೀಘ್ರದಲ್ಲೇ ಪೊಲೀಸ್ ಹುದ್ದೆಗಳ ನೇಮಕಾತಿಗೆ ವಯೋಮಿತಿ ಸಡಿಲಿಕೆ ಬಗ್ಗೆ ನಿಯಮ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.