ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಬಗ್ಗೆ ಭಯಪಡಬೇಕಾದ ಪರಿಸ್ಥಿತಿ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೇರೆ ದೇಶಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಆದರೆ ನಮ್ಮಲ್ಲಿ ಅಂತಹ ಯಾವುದೇ ಲಕ್ಷಣಗಳು ಪತ್ತೆಯಾಗಿಲ್ಲ. ಹೀಗಾಗಿ ಅನಗತ್ಯವಾಗಿ ಆತಂಕಪಡುವುದು ಬೇಡ. ಕೋವಿಡ್ಗೆ ಸಂಬಂಧಿಸಿದಂತೆ ಕೆಂದ್ರ ಸರ್ಕಾರದ ಜತೆಗೆ ಸಂಪರ್ಕದಲ್ಲಿದ್ದೇವೆ. ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಕೂಡ ಚರ್ಚೆ ಮಾಡುತ್ತಿದ್ದಾರೆ. ಈ ಋತುವಿನಲ್ಲಿ ಜ್ವರ ಸಂಬಂಧಿ ಅನಾರೋಗ್ಯ ಸಮಸ್ಯೆಗಳು ಸಹಜವಾಗಿ ಕಾಣಿಸಿಕೊಳ್ಳುತ್ತವೆ. ಇಂತಹ ಸಂದರ್ಭದಲ್ಲಿ ಮಾಸ್ಕ್ ಧರಿಸುವಿಕೆಯಂತಹ ಮುನ್ನೆಚ್ಚರಿಕೆ ವಹಿಸುವುದು ಉತ್ತಮ ಎಂದು ಅವರು ತಿಳಿಸಿದ್ದಾರೆ.