ಬೆಂಗಳೂರು : ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಾಗಿ ಇಂದಿರಾ ಆಹಾರ ಕಿಟ್ ವಿತರಿಸುವ ಕುರಿತು ಈಗಾಗಲೇ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನ ಕುರಿತಾಗಿ ನಡೆಸಿದ ಸಭೆಯಲ್ಲಿ ಕೆಲವು ಸೂಚನೆಗಳನ್ನ ನೀಡಿದರು.
ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಾಗಿ ಇಂದಿರಾ ಆಹಾರ ಕಿಟ್ ವಿತರಿಸುವ ಕುರಿತು ಈಗಾಗಲೇ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
- ಈ ಯೋಜನೆಯಡಿ ಕುಟುಂಬದ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಐದು ಕೆಜಿ ಅಕ್ಕಿ ಬದಲಾಗಿ ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ, ಸಕ್ಕರೆ, ಉಪ್ಪು ನೀಡಲಾಗುವುದು.
- ಪ್ರತಿ ತಿಂಗಳು ಪ್ರಸ್ತುತ 1,25,08,262 ಇಂದಿರಾ ಆಹಾರ ಕಿಟ್ಗಳ ಅಗತ್ಯವಿದ್ದು, ಇದಕ್ಕಾಗಿ ಪ್ರತಿ ತಿಂಗಳು ರೂ.466 ಕೋಟಿ ವೆಚ್ಚ ಅಂದಾಜಿಸಲಾಗಿದೆ.
- ಈ ಯೋಜನೆಯಡಿ ಪ್ರತಿ ತಿಂಗಳು ಒಟ್ಟು 18,628 ಮೆ.ಟನ್ ತೊಗರಿ ಬೇಳೆ ಮತ್ತು ತಲಾ 12,419 ಮೆ.ಟನ್ ಸೂರ್ಯಕಾಂತಿ ಎಣ್ಣೆ, ಸಕ್ಕರೆ ಮತ್ತು ಉಪ್ಪು ಅಗತ್ಯವಿದೆ ಎಂದು ಅಂದಾಜಿಸಲಾಗಿದೆ.
- ಆಹಾರ ಕಿಟ್ನಲ್ಲಿ ಪೌಷ್ಟಿಕಾಂಶಗಳಿಂದ ಕೂಡಿರುವ ತೊಗರಿ ಬೇಳೆ ಗರಿಷ್ಟ ಪ್ರಮಾಣದಲ್ಲಿ ನೀಡಲು ಕ್ರಮ ಕೈಗೊಳ್ಳಬೇಕು.
- ನಾಫೆಡ್/ ಎನ್ಸಿಸಿಎಫ್ನಂತಹ ಕೇಂದ್ರ ಸರಬರಾಜು ಸಂಸ್ಥೆಗಳ ಮೂಲಕ ಅಥವಾ ಖರೀದಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಕೆಟಿಪಿಪಿ ಅನ್ವಯ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು.
- ಉತ್ತಮ ಗುಣಮಟ್ಟದ ಆಹಾರ ಸಾಮಾಗ್ರಿಗಳನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿ ರಾಜಿಯಾಗಬಾರದು. ಇದೇ ರೀತಿ ಅಳತೆಯಲ್ಲಿ ಹೆಚ್ಚು ಕಡಿಮೆಯಾಗದಂತೆ ಎಚ್ಚರಿಕೆ ವಹಿಸಬೇಕು.
- ಅತ್ಯುತ್ತಮ ಗುಣಮಟ್ಟ ಕಾಯ್ದುಕೊಳ್ಳಬೇಕು. ಯಾವುದೇ ರೀತಿಯ ದೂರಿಗೆ ಅವಕಾಶವಾಗದಂತೆ ಪಾರದರ್ಶಕವಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು.
- ಪ್ರತಿ ನ್ಯಾಯಬೆಲೆ ಅಂಗಡಿಯಲ್ಲಿಯೂ ಸಹ ಕ್ಯೂಆರ್ ಸ್ಕ್ಯಾನ್ ಮಾಡಬಹುದಾದ ತಂತ್ರಾಂಶವನ್ನು ಅಳವಡಿಸಿ ಅದರ ಆಧಾರದ ಮೇಲೆ ಪಡಿತರ ಚೀಟಿದಾರರಿಗೆ ಇಂದಿರಾ ಕಿಟ್ ವಿತರಣೆಗೆ ಕ್ರಮ ಕೈಗೊಳ್ಳಬೇಕು.
- ಸರಬರಾಜಾದ ಕಿಟ್ಗಳನ್ನು ನಿಗಮದ ಗೋದಾಮು/ಸಗಟು ಮಳಿಗೆಗಳ ಮೂಲಕ ನ್ಯಾಯಬೆಲೆ ಅಂಗಡಿಗಳಿಗೆ 10ನೇ ತಾರೀಕು ಒಳಗಾಗಿ ವಿತರಣೆ ಮಾಡಬೇಕು ಎಂದರು.
