ಮದ್ದೂರು: ಉಚಿತ ಯೋಜನೆ ಕೊಡುವುದು ದೊಡ್ಡ ತಪ್ಪು, ಸರ್ಕಾರದ ಗ್ಯಾರಂಟಿಗಳು ಅಭಿವೃದ್ಧಿಗೆ ಮಾರಕ ಎಂದು ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಹೇಳಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ಗ್ಯಾರಂಟಿ ಯೋಜನೆಗಳನ್ನು ಕೊಡುವುದೇ ದೊಡ್ಡ ತಪ್ಪು, ಅಭಿವೃದ್ಧಿಗೆ ಹಣ ಇಲ್ಲ ಎನ್ನುವವರು ಗ್ಯಾರಂಟಿ ಯೋಜನೆಗಳಿಗೆ ಕೊಡುತ್ತಿದ್ದಾರೆ. ಇಂತಹ ಯೋಜನೆಗಳು ಅಭಿವೃದ್ಧಿಗೆ ಮಾರಕವಾಗಿದ್ದು, ಆರ್ಥಿಕ ಪರಿಸ್ಥಿತಿ ತಲ್ಲಣಕ್ಕೂ ಕಾರಣವಾಗಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಗ್ಯಾರಂಟಿ ಯೋಜನೆಗಳನ್ನು ಜನ ಕೇಳಿರಲಿಲ್ಲ. ಅಧಿಕಾರಕ್ಕೆ ಬರುವುದನ್ನೇ ಗುರಿಯಾಗಿಸಿಕೊಂಡು ಗ್ಯಾರಂಟಿ ಘೋಷಿಸಿದರು. ಪ್ರತಿ ವರ್ಷ 25000 ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ನೀಡಿದ್ದಾರೆ. ಇನ್ನು ಅಭಿವೃದ್ಧಿಗೆ ಹಣ ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ.
ಗ್ಯಾರಂಟಿಗೆ ಹಣ ಖರ್ಚು ಮಾಡುತ್ತಿರುವುದನ್ನು ಸರಿದೂಗಿಸಲು ಜನರ ಮೇಲೆ ತೆರಿಗೆ ಹೆಚ್ಚಿಸಿದ್ದಾರೆ. ವಿದ್ಯುತ್, ನೋಂದಣಿ ಶುಲ್ಕ, ಮದ್ಯ ಸೇರಿದಂತೆ ಹಲವು ತೆರಿಗೆ ಹೆಚ್ಚಳ ಮಾಡಲಾಗಿದೆ. ಜನರ ಮೇಲೆ ತೆರಿಗೆ ಹೊರೆ ಹಾಕಿ ನುಡಿದಂತೆ ನಡೆದಿದ್ದೇವೆ ಎನ್ನುತ್ತಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದಾರೆ.